ಬಿಜೆಪಿಗೆ ತೀವ್ರ ಮುಖಭಂಗ | ಸಚಿವ ಎಂ.ಬಿ.ಪಾಟೀಲರ ಮೇಲುಗೈ | ಬಿಜೆಪಿ ಸದಸ್ಯರಿಂದ ಚುನಾವಣೆ ಬಹಿಷ್ಕಾರ
ವಿಜಯಪುರ: ನಗರದಲ್ಲಿ ಮಂಗಳವಾರ ನಡೆದ ವಿಜಯಪುರ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ.
ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಮೆಹಜಬೀನ್ ಹೊರ್ತಿ, ಉಪಮೇಯರ್ ಆಗಿ ದಿನೇಶ ಹಳ್ಳಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಮಹಾಪೌರ ಸ್ಥಾನಕ್ಕೆ ೩೪ನೇ ವಾರ್ಡಿನ ಸದಸ್ಯೆ ಮಾಹೇಜಬೀನ್ ಹೊರ್ತಿ ಹಾಗೂ ಬಿಜೆಪಿಯಿಂದ ೧೨ನೇ ವಾರ್ಡಿನ ಸದಸ್ಯೆ ರಶ್ಮಿ ಕೋರಿ ನಾಮಪತ್ರ ಸಲ್ಲಿಸಿದ್ದರು. ಇನ್ನು ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದ್ದ ಉಪ ಮಹಾಪೌರ ಸ್ಥಾನಕ್ಕೆ ೧೮ ನೇ ವಾರ್ಡಿನ ಸದಸ್ಯ ದಿನೇಶ ಹಳ್ಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.
ಒಟ್ಟು 35 ಸದಸ್ಯ ಬಲದ ಮಹಾನಗರ ಪಾಲಿಕೆಗೆ 2022ರ ಅಕ್ಟೋಬರ್ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 10, ಎಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರರು 5 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಯಾವೊಂದು ಪಕ್ಷಕ್ಕೂ ನಿಚ್ಚಳ ಬಹುಮತ ಇಲ್ಲದೆ ಪಾಲಿಕೆ ಅತಂತ್ರವಾಗಿತ್ತು. ಬಳಿಕ ಮೇಯರ್, ಉಪಮೇಯರ್ ಸ್ಥಾನದ ಮೀಸಲಾತಿ ಪ್ರಶ್ನಿಸಿ ಕೆಲ ಸದಸ್ಯರು ಹೈಕೋರ್ಟ್ ಮೇಟ್ಟಿಲೇರಿದ್ದ ಕಾರಣ 14 ತಿಂಗಳಿಂದ ಚುನಾವಣೆ ನಡೆದಿರಲಿಲ್ಲ.
ಮಹಾನಗರ ಪಾಲಿಕೆಯ 35 ವಾರ್ಡ್ಗಳಲ್ಲಿ ಕೇವಲ 10 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದರೂ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಪಕ್ಷೇತರರು ಕೈ ಹಿಡಿದ ಪರಿಣಾಮ ಪಾಲಿಕೆಯಲ್ಲಿ ಕಾಂಗ್ರೆಸ್ ಕೈ ಮೇಲಾಗಿದೆ. ಪಕ್ಷೇತರರ ಜೊತೆಗೆ ಎಐಎಂಐಎಂ ಹಾಗೂ ಜೆಡಿಎಸ್ ಓರ್ವ ಸದಸ್ಯ ಸಹ ಕಾಂಗ್ರೆಸ್ಗೆ ಬೆಂಬಲಿಸಿದ್ದಾರೆ.
ಅತ್ಯಧಿಕ ಸ್ಥಾನ ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಬಿಜೆಪಿ ಮತ್ತೊಮ್ಮೆ ಪಾಲಿಕೆ ಗದ್ದುಗೆ ಹಿಡಿಯುವಲ್ಲಿ ವಿಫಲವಾಗಿದೆ.
ಕಳೆದ ವಾರ ೨೯ನೇ ವಾರ್ಡಿನ ಬಿಜೆಪಿ ಪಾಲಿಕೆ ಸದಸ್ಯ ವಿಜಯಕುಮಾರ ಬಿರಾದಾರ ಅಕಾಲಿಕ ನಿಧನದಿಂದಾಗಿ ಬಿಜೆಪಿ ಸಂಖ್ಯಾಬಲ ೧೬ ಕ್ಕೆ ಇಳಿದಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸದಂತೆ ಬಿಜೆಪಿ ಸದಸ್ಯರು ಸಂಸದ ರಮೇಶ ಜಿಗಜಿಣಗಿ ಮತ್ತು ಶಾಸಕ ಬಸನಗೌಡ ಪಾಟೀಲ, ಯತ್ನಾಳ ಅವರ ನೇತೃತ್ವದಲ್ಲಿ ಚುನಾವಣಾಧಿಕಾರಿಯಾಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಚುನಾವಣೆ ನಡೆಸದಂತೆ ಮನವಿ ಮಾಡಿದರು. ಆದರೆ ಆಯುಕ್ತರು ಇವರ ಮನವಿಯನ್ನು ಪುರಸ್ಕರಿಸದ ಕಾರಣ ಬಿಜೆಪಿ ಸದಸ್ಯರು ಕಪ್ಪು ಬಟ್ಟೆ ಪ್ರದರ್ಶಿಸಿ, ಚುನಾವಣಾಧಿಕಾರಿ ವಿರುದ್ಧ ಘೋಷಣೆಗಳನ್ನು ಕೂಗುತ್ತ ಚುನಾವಣೆ ಬಹಿಷ್ಕರಿಸಿ ಹೊರನಡೆದರು.
ಕೋರಂ ಅನ್ವಯ 14 ಜನ ಸದಸ್ಯರ ಹಾಜರಾತಿ ಇದ್ದ ಪರಿಣಾಮ ಚುನಾವಣಾ ಪ್ರಕ್ರಿಯೆ ಸರಾಗವಾಗಿ ಸಾಗಿತು. ಕೈ ಎತ್ತುವ ಮೂಲಕ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ 22 ಜನ ಸದಸ್ಯರು ಕೈ ಎತ್ತುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ಉಪಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು. ಹೀಗಾಗಿ ನಿರೀಕ್ಷೆಯಂತೆ ಈ ಕೆಟಗರಿಯಲ್ಲಿ ಓರ್ವರೇ ಸದಸ್ಯರಿರುವುದರಿಂದ ವಾರ್ಡ್ ಸಂಖ್ಯೆ 18ರ ಸದಸ್ಯ ದಿನೇಶ ಹಳ್ಳಿ ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾದರು.
ಕಾಂಗ್ರೆಸ್ ಪಕ್ಷಕ್ಕೆ ಮಹಾನಗರ ಪಾಲಿಕೆ ಅಧಿಕಾರ ಖಚಿತವಾಗುತ್ತಿದ್ದಂತೆ ಪಾಲಿಕೆ ಹೊರಗಿದ್ದ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಗುಲಾಲು ಎರಚಿ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ವಿತರಿಸಿ ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು.


