ವಿಜಯಪುರ: ಮಹಾ ಮಾನವತಾವಾದಿ, ಸಮಾಜ ಸುಧಾರಣೆಯ ಮಹಾನಾಯಕ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವುದು, ಕರ್ನಾಟಕ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಸಚಿವರಾದ ಶರಣ ಶ್ರೀ ಎಂ ಬಿ ಪಾಟೀಲ ಹಾಗೂ ಸಂಪುಟದ ಎಲ್ಲ ಸಚಿವರಿಗೆ, ಶಾಸಕರಿಗೆ, ನಾಡಿನ ಸಮಸ್ತ ಮಠಾಧೀಶರಿಗೆ, ಸಮಸ್ತ ಬಸವಾಭಿಮಾನಿಗಳ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.
ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವುದರ ಜೊತೆಗೆ ಅವರ ವಚನ ಸಾಹಿತ್ಯ ಚಿಂತನೆಗಳನ್ನು, ಮನೆ ಮನಗಳಿಗೆ ತಲುಪಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಹೇಳಿರುವ ನೈಜ ಬಸವಾನುಯಾಯಿ ಸಿದ್ದರಾಮಯ್ಯನವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಲೆ, ಸಾಹಿತ್ಯ, ಸಂಗೀತ, ರಾಜಕೀಯ, ಸಾಮಾಜಿಕ, ಆರ್ಥಿಕ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿದ ಮಹಾತ್ಮ ವಿಶ್ವಗುರು ಬಸವಣ್ಣನವರು. ಅವರು ಬರೀ ಕರ್ನಾಟಕದ ಸಾಂಸ್ಕೃತಿಕ ನಾಯಕರಲ್ಲ, ವಿಶ್ವದ ಸಾಂಸ್ಕೃತಿಕ ನಾಯಕರು ಎನ್ನುವುದರಲ್ಲಿ ಎರಡು ಮಾತಿಲ್ಲ. ಜಗತ್ತಿನ ಎಲ್ಲಾ ಸಂವಿಧಾನಗಳು ವಚನ ಸಾಹಿತ್ಯದ ಮೇಲೆ ನಿಂತಿವೆ. ನಾವು ಬಸವ ನಾಡಿನಲ್ಲಿ ಹುಟ್ಟಿದವರು, ಬಸವಣ್ಣನವರು ನಡೆದಾಡಿದ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರು ಎನ್ನುವುದು ನಾವೆಲ್ಲ ಸದಾಕಾಲ ಅಭಿಮಾನ ಪಡುವ ಸಂಗತಿ ಎಂದು ಸಂಗಮೇಶ ಬಬಲೇಶ್ವರ ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ಹಂತದಿಂದ ಪದವಿಯವರೆಗೆ ಬಸವಣ್ಣನವರ ವಚನ ಸಾಹಿತ್ಯವನ್ನು ವಿದ್ಯಾರ್ಥಿಗಳ ಪಾಠಗಳಲ್ಲಿ ಅಳವಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಅದನ್ನು ಎಲ್ಲಾ ಹಂತದಲ್ಲಿಯೂ ರಾಜ್ಯ ಸರ್ಕಾರ ಮಾಡಲು ಮುಂದಾಗಿರುವುದು ನಮ್ಮೆಲ್ಲರಿಗೂ ಸಂತೋಷವನ್ನುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

