ವಿಜಯಪುರ: ಜಿಲ್ಲಾಡಳಿತದ ವತಿಯಿಂದ ವಿಜಯಪುರ ನಗರದ ಗಾಂಧಿ ಭವನದಲ್ಲಿ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿಭವನದಲ್ಲಿ ಹಮ್ಮಿಕೊಂಡ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿಭವನವು ಸೆಪ್ಟಂಬರ್ ೩೦ಕ್ಕೆ ಉದ್ಘಾಟನೆಗೊಂಡು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಗಾಂಧಿ ಭವನದಲ್ಲಿ ಮಹಾತ್ಮ ಗಾಂಧೀಜಿಯವರ ತತ್ವಾದರ್ಶದ ಅಂಶಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ಗಾಂಧಿಭವನವನ್ನು ಪ್ರೇರಣಾ ತಾಣವನ್ನಾಗಿಸಲು ರೂಪುರೇಷೆ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಗಾಂಧಿಭವನಕ್ಕೆ ಭೇಟಿ ನೀಡಿ ಗಾಂಧೀಜಿಯವರು ಸ್ವಾತಂತ್ರ್ಯಕ್ಕಾಗಿನ ಹೋರಾಟಗಳು, ಸತ್ಯ ಅಹಿಂಸೆ ಮಾರ್ಗಗಳ ಹಲವು ವಿಚಾರಗಳನ್ನೊಳಗೊಂಡ ವಿಷಯಗಳು ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದ್ದು, ಗಾಂಧಿಭವನಕ್ಕೆ ಭೇಟಿ ನೀಡುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳ ಕುರಿತು ಅರಿತುಕೊಳ್ಳಬೇಕು. ಇಂದಿನ ಪೀಳಿಗೆ ಗಾಂಧೀಜಿ ಅವರ ಚಿಂತನೆ ಅವರ ವಿಚಾರಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಅವರು ಮಾತನಾಡಿ, ಬಾಪೂಜಿ ಅವರ ಸತ್ಯ ಮತ್ತು ಅಹಿಂಸಾ ತತ್ವಗಳು ಈ ಎರಡೂ ವಿಚಾರಗಳನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ಇಂತಹ ದಾರ್ಶನಿಕ, ಮಹಾತ್ಮರ ಆದರ್ಶ ವಿಚಾರಗಳನ್ನು ತಿಳಿದುಕೊಂಡು ನಡೆಯಬೇಕು ಎಂದು ಹೇಳಿದರು.
ಸ್ವಾತಂತ್ರಕ್ಕಾಗಿ ಹೋರಾಡಿದ ಮಹನೀಯರ, ದೇಶ ರಕ್ಷಣೆಯಲ್ಲಿ ಪ್ರಾಣತೆತ್ತು ಹುತಾತ್ಮರಾದ ಹುತಾತ್ಮರಿಗೆ ನಮನ ಸಲ್ಲಿಸಲಾಯಿತು.
ಇದಕ್ಕೂ ಮೊದಲು ಬೆಳಿಗ್ಗೆ ಗಾಂಧಿ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹಾಗೂ ಇತರ ಅಧಿಕಾರಿಗಳೊಂದಿಗೆ ಸ್ವಚ್ಛತಾ ಶ್ರಮದಾನ ಮಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ರಾಹುಲ್ ಡೋಂಗ್ರೆ, ಡಾ.ರಿಯಾಜ ಫಾರೂಖಿ, ಪೀಟರ್ ಅಲೆಕ್ಸಾಂಡರ್, ನಿಲೇಶ ಬೇನಾಳ ಸೇರಿದಂತೆ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

