ಜಲಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರಗೆ ಮನವಿ | ಸಚಿವ ಶಿವಾನಂದ ಪಾಟೀಲ ಸ್ಪಷ್ಠನೆ
ಬಸವನಬಾಗೇವಾಡಿ: ಬೇಸಿಗೆ ಕಾಲದಲ್ಲಿ ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ಜನರಿಗೆ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಬವಣೆ ಉಂಟಾಗಬಾರದು ಎಂಬ ಉದ್ದೇಶದಿಂದ ಆಲಮಟ್ಟಿ ಜಲಾಶಯದಿಂದ ಅವಳಿ ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳಿಗೆ ನೀರು ಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಮಾಡಲಾಗಿದೆ. ನೀರಿನ ಬವಣೆ ನಿವಾರಿಸಲು ಫೆಬ್ರುವರಿ ಮೊದಲ ವಾರದಲ್ಲಿ ಅವಳಿ ಜಿಲ್ಲೆಯ ಅಂದಾಜು ೧೭೫ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ, ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕೊಲ್ಹಾರ, ಬಸವನಬಾಗೇವಾಡಿ, ನಿಡಗುಂದಿ ತಾಲೂಕುಗಳು ಬರಗಾಲಕ್ಕೆ ಒಳಗಾಗಿರುವದರಿಂದಾಗಿ ತೀವ್ರ ಕುಡಿಯುವ ನೀರಿನ ತೊಂದರೆ ಉಂಟಾಗಿರುತ್ತದೆ. ತಾಲೂಕುಗಳಲ್ಲಿ ಜನ-ಜಾನುವಾರುಗಳಿಗೆ ತುರ್ತಾಗಿ ಕುಡಿಯುವ ನೀರನ್ನು ಒದಗಿಸಬೇಕಾಗಿದೆ. ಮುಳವಾಡ ಏತ ನೀರಾವರಿ ಯೋಜನೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೊಲ್ಹಾರ, ನಿಡಗುಂದಿ ಮತ್ತು ಬಸವನಬಾಗೇವಾಡಿ ತಾಲೂಕುಗಳ ರೈತರು ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಂಬಂಧ ಮತ್ತು ಕೆರೆಗಳನ್ನು ತುಂಬಿಸುವ ಸಂಬಂಧ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದಾರೆ. ಅವರು ಯಾವುದೇ ಕಾನೂನು ಕೈಗೆ ತೆಗೆದುಕೊಳ್ಳದೇ ಸಂಯಮದಿಂದ ಇರಬೇಕು. ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಣಯವಾದ್ದಂತೆ ಅವಳಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಭವಣೆ ನಿವಾರಿಸಲು ಕೆರೆಗಳಿಗೆ ಜಲಾಶಯದಿಂದ ನೀರು ತುಂಬಿಸಲಾಗುವುದು. ಕೆರೆ ತುಂಬುವ ಯೋಜನೆಗೋಸ್ಕರ ೬ ಟಿಎಂಸಿ ನೀರನ್ನು ನಿಗದಿಪಡಿಸಿದ್ದು. ಫೆಬ್ರುವರಿ ಮೊದಲ ವಾರದಲ್ಲಿ ೧.೫ ಟಿಎಂಸಿ ನೀರನ್ನು ಕೆರೆಗಳಿಗೆ ಬಿಡಲಾಗುವುದು. ಜನರು ಆತಂಕ ಪಡಬಾರದು ಎಂದರು.
ಈಗಾಗಲೇ ಕೃಷ್ಣಾ ಭಾಗ್ಯ ಜಲ ನಿಗಮದಿಂದ ೨೦೨೩-೨೪ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಣೆಕಟ್ಟುಗಳ ವ್ಯಾಪ್ತಿಯಲ್ಲಿ ಬರುವ ನೀರಾವರಿ ಯೋಜನೆಗಳಾದ ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಮತ್ತು ಆಲಮಟ್ಟಿ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ರೈತರ ಅನುಕೂಲಕ್ಕಾಗಿ ಮೆಣಸಿನಕಾಯಿ ಹಾಗೂ ಬಾಕಿ ಉಳಿದಿರುವ ಬೆಳೆಗಳನ್ನು ಸಂರಕ್ಷಿಸುವ ಸಲುವಾಗಿ ೨.೭೫ ಟಿಎಂಸಿ ನೀರನ್ನು ಜ.೬ ರಂದು ಕೈಗೊಂಡಿರುವ ನಿಗಮದ ನಿರ್ಣಯದಂತೆ ನೀರನ್ನು ಬಿಡಲಾಗಿದೆ ಎಂದರು.

