ಕೇಂದ್ರ ಜಲ ಶಕ್ತಿ ತಂಡದಿಂದ ಮಹಾತ್ಮಗಾಂಧಿ ನರೇಗಾ-ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ
ವಿಜಯಪುರ: ಅಂತರ್ಜಲ ಮಟ್ಟ ಹೆಚ್ಚಿಸುವ ಕಾಮಗಾರಿಗಳಾದ ಮಳೆನೀರು ಕೊಯ್ಲು ಘಟಕ, ಬೋರ್ ವೆಲ್ ಮರುಪೂರಣ ಘಟಕ ಹಾಗೂ ವಿವಿಧ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಹಾಗೂ ನಿಯಮಾನುಸಾರ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಕೇಂದ್ರ ಜಲ ಶಕ್ತಿ ತಂಡದ ಅಧಿಕಾರಿಗಳು ಸೂಚಿಸಿದರು.
ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು, ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಷ್ ಕೇಶರ್ವಾಣಿಯನ್ನೊಳಗೊಂಡ ತಂಡದಿಂದ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಜಲಾನಯನ ಕಾಮಗಾರಿಗಳನ್ನು ಜಿಯೋ ಟ್ಯಾಗ್ ಮಾಡಬೇಕು. ಜಲ ಶಕ್ತಿ ಅಭಿಯಾನದ ಅಡಿಯಲ್ಲಿ(JSA) ಅಡಿ ಅನುಷ್ಠಾನಗೊಳಿಸುವ ಕಾಮಗಾರಿಗಳನ್ನು ಹಾಗೂ ಮುಕ್ತಾಯಗೊಂಡ ಅಮೃತ ಸರೋವರ ಕಾಮಗಾರಿಗಳನ್ನು ಕಡ್ಡಾಯವಾಗಿ ಜಲ ಶಕ್ತಿ ಅಭಿಯಾನ(JSA)ದ ಆಪ್ ನಲ್ಲಿ ಜಿಯೋಟ್ಯಾಗ್ ಮಾಡಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಗುಣಮಟ್ಟದ ಪರಶೀಲನೆ ನಡೆಸಬೇಕು ಜಿಲ್ಲೆಯಲ್ಲಿ ನೀರಾವರಿ ಪ್ರದೇಶವು ಈಗ ೩೦೨೮೮೮ ಹೆಕ್ಟೇರ್ ಇದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣ ನೀರಾವರಿ ಪ್ರದೇಶವನ್ನು ವಿಸ್ತರಿಸಬೇಕು ಎಂದರು.
ಪ್ರಸ್ತುತ ಬರಗಾಲ ಘೋಷಣೆಯಾಗಿರುವುದರಿಂದ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹಾಗೂ ಅನುಷ್ಠಾನ ಇಲಾಖೆಗಳ ಅಡಿಯಲ್ಲಿ ಹಮ್ಮಿಕೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಎನ್.ಆರ್.ಎಮ್ ಕಾಮಗಾರಿಗಳಾದ ಕೆರೆ ಅಭಿವೃದ್ಧಿ/ಹೂಳೆತ್ತುವುದು, ಅಮೃತ ಸರೋವರ ಕಾಮಗಾರಿಗಳು, ನಾಲಾ/ಹಳ್ಳ ಹೂಳೆತ್ತುವುದು, ಕೃಷಿ ಹೊಂಡ, ಬದು ನಿರ್ಮಾಣ, ಅರಣ್ಯ ಇಲಾಖೆಯಡಿ ನೆಡುತೋಪು ನಿರ್ಮಾಣ, ತೋಟಗಾರಿಕೆ ಕಾಮಗಾರಿಗಳು, ಕೃಷಿ ಇಲಾಖೆ ಕಾಮಗಾರಿಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಯಿತು.
ಇದೇ ವೇಳೆ ಜಿಲ್ಲಾ ಪಂಚಾಯತಿಯ ಆವರಣದಲ್ಲಿರುವ ಜಲ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ್ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಡಾ. ವಿಜಯ ಕುಮಾರ ಆಜೂರ ಹಾಗೂ ಅನುಷ್ಠಾನ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

