ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಇಂಡಿ ತಾಲೂಕಿನ ಬಬಲಾದ, ಚವಡಿಹಾಳ ಮತ್ತು ಝಳಕಿ ಮತ್ತು ಚಡಚಣ ತಾಲೂಕಿನ ನಂದರಗಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳಗುಣಕಿ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ಶಾಲೆಯ ಕಂಪೌಂಡ್, ಆಟದ ಮೈದಾನ, ಅಡುಗೆ ಕೋಣೆ ವೀಕ್ಷಣೆ ಮಾಡಿ, ವಸತಿ ನಿಲಯಕ್ಕೆ ಮುಂದಿನ ಒಂದು ವಾರದಲ್ಲಿ ಸ್ನಾನಗೃಹ ಹಾಗೂ ಇನ್ನೂ ಹೆಚ್ಚುವರಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಗತಿ ಹಂತದಲ್ಲಿರುವ ಆಟದ ಮೈದಾನದ ಕಾಮಗಾರಿಗೆ ವೇಗ ನೀಡಿ, ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಬೇಕು ಎಂದು ಸೂಚನೆ ನೀಡಿದರು.
ಶಾಲಾ ಕೊಠಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಹಾಜರಾತಿ ಮತ್ತು ಮಕ್ಕಳ ಕಲಿಕಾ ವಿವರ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಬೇಕು ಎಂದು ಮಕ್ಕಳಿಗೆ ಕಿವಿಮಾತುಗಳನ್ನು ಹೇಳಿದರು. ಮಕ್ಕಳಿಗೆ ದಿನ ದಿನಪತ್ರಿಕೆಗಳನ್ನು ಹಾಗೂ ಸಾಮಾನ್ಯ ಜ್ಞಾನ ಪುಸ್ತಕಗಳನ್ನು ಒದಗಿಸುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆೆ ಸೂಚಿಸಿದರು.
ಬಬಲಾದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಡಿ ಅನುಷ್ಟಾನಗೊಂಡ ನರ್ಸರಿ ಕಾಮಗಾರಿಯನ್ನು ವೀಕ್ಷಣೆ ಮಾಡಿ ಸೂಕ್ತ ನಿರ್ವಹಣೆಗೆ ಸೂಚಿಸಿದ ಅವರು, ಮುಂಬರುವ ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ಸೂಕ್ತ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನಲ್ಲಿರುವ ೫ ಕೆರೆಗಳನ್ನು ತುಂಬುವುದರ ಮೂಲಕ ತಾಲೂಕಿನ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಬಹುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ವಿವರಿಸಿದರು. ನಂತರ ಬಬಲಾದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಕಟ್ಟಡ ಹಾಗೂ ಹೊಸ ಉದ್ಯಾನವನ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಚವಡಿಹಾಳ ಗ್ರಾಮದ ತೋಟದ ವಸ್ತಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ನೀರು ಸರಬರಾಜು ಕುರಿತು ಚರ್ಚಿಸಿದರು. ಶುದ್ಧ ಕುಡಿಯುವ ನೀರಿನ ಘಟಕ ವೀಕ್ಷಣೆ ಮಾಡಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಬಳಿಕ ಝಳಕಿ ಗ್ರಾಮ ಪಂಚಾಯತಿಯ ಅರ್ಜನಾಳ ಗ್ರಾಮದ ಬಹುಹಳ್ಳಿ ಕುಡಿಯುವ ನೀರಿನ ಘಟಕವನ್ನು ಮತ್ತು ನೀರಿನ ಶುದ್ಧೀಕರಣ ಪ್ರಕ್ರಿಯೆಯನ್ನು ವೀಕ್ಷಣೆ ಮಾಡಿ ಸದರಿ ಘಟಕದಿಂದ ೪೬ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ನಂದರಗಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಕುರಿತು ಅಲ್ಲಿನ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಾಬು ರಾಠೋಡ, ಚಡಚಣ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂಜಯ ಖಡಗೇಕರ, ಸಹಾಯಕ ನಿರ್ದೇಶಕರು(ಗ್ರಾ.ಉ) ಚಡಚಣ ತಾಲೂಕಿನ ಸಹಾಯಕ ನಿರ್ದೇಶಕರು(ಗ್ರಾ.ಉ) ಮಹಾಂತೇಶ ಹೋಗೊಡಿ, ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ ಇಂಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಲಕ್ಷ್ಮಣ ರಾಠೋಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎಸ್.ಆರ್ ರುದ್ರವಾಡಿ, ಜಿಲ್ಲಾ ಪಂಚಾಯತಿಯ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಪೃಥ್ವಿರಾಜ ಪಾಟೀಲ, ಯೋಜನಾ ಬಬಲಾದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿದರಾಯ ಬಿರಾದಾರ, ಚವಡಿಹಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿ.ಜಿ. ಪಾರೆ, ಝಳಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ರಜಪೂತ, ನಂದರಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭೀಮಾಶಂಕರ ಕುಂಬಾರ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಜಿ.ಪಂ ಸಿಇಓ ರಿಷಿ ಆನಂದ ವಿವಿಧ ಗ್ರಾಪಂಗಳಿಗೆ ಭೇಟಿ-ಪರಿಶೀಲನೆ
Related Posts
Add A Comment

