ಭೂ ಸುರಕ್ಷಾ ಯೋಜನೆಯಡಿಯ ಅಭಿಲೇಖಾಲಯದ ದಾಖಲೆಗಳು
ವಿಜಯಪುರ: ಭೂ ಸುರಕ್ಷಾ ಯೋಜನೆಯಡಿಯಲ್ಲಿ ಅಭಿಲೇಖಾಲಯದ ಎಲ್ಲ ದಾಖಲೆಗಳ ಗಣಕೀಕರಣಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಮೂಲ ಸೌಲಭ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಚಾಲನೆ ನೀಡಿದರು.
ಶನಿವಾರ ನಗರದ ಮಿನಿವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ದಾಖಲೆಗಳ ಡಿಜಿಟಲೀಕರಣದಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ರಾಜ್ಯದ ಪ್ರತಿ ಜಿಲ್ಲೆಯಿಂದ ಒಂದು ತಾಲೂಕು ಕಚೇರಿಯನ್ನು ೧೦೦ ದಿನಗಳೊಳಗಾಗಿ ಸಂಪೂರ್ಣ ಗಣಕೀಕರಣಗೊಳಿಸಲು ಆಯ್ಕೆ ಮಾಡಿಕೊಂಡಿದ್ದು, ವಿಜಯಪುರ ಜಿಲ್ಲೆಯ ವಿಜಯಪುರ ತಾಲೂಕನ್ನು ಈ ಕಾರ್ಯಕ್ರಮದಡಿ ಆಯ್ಕೆ ಮಾಡಿಕೊಂಡಿದ್ದು, ವಿಜಯಪುರ, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳ ದಾಖಲೆಗಳು ಆಧುನೀಕರಣ ಯೋಜನೆಯಡಿ ಡಿಜಿಟಲೀಕರಣಗೊಳ್ಳಲಿವೆ ಎಂದು ಅವರು ಹೇಳಿದರು.
ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಪ್ರಮುಖ ದಾಖಲೆಗಳ ಗಣಕೀಕರಣಗೊಳಿಸುವ ನಿಟ್ಟಿನಲ್ಲಿ ದಾಖಲೆಗಳ ಇಂಡೆಕ್ಸಿಂಗ್, ಕ್ಯಾಟಲಾಗಿಂಗ್ ಹಾಗೂ ಡಾಟಾ ಎಂಟ್ರಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಕಂದಾಯ ದಾಖಲೆಗಳ ಗಣಕೀಕರಣ ತಂತ್ರಾಂಶದಲ್ಲಿ ದಾಖಲೆಗಳನ್ನು ಅಪಲೋಡ್ ಮಾಡಲು ರಾಜ್ಯದ ಪ್ರತಿ ಅಭಿಲೇಖಾಲಯದ ವಿಷಯ ನಿರ್ವಾಹಕರು, ಶಿರಸ್ತೆದಾರ, ತಹಶೀಲ್ದಾರರು ಹಾಗೂ ಸಹಾಯಕ ಆಯುಕ್ತರವರ ಲಾಗಿನ್ಗಳನ್ನು ಸೃಜನೆ ಮಾಡಲಾಗಿದ್ದು, ವಿಜಯಪುರ, ಬಬಲೇಶ್ವರ ಮತ್ತು ತಿಕೋಟಾ ತಾಲೂಕಿನ ಅಭಿಲೇಖಾಲಯದಲ್ಲಿರುವ ಒಟ್ಟು ೫,೧೮೧, ೬೩೪ ಕಡತಗಳು ನುರು ದಿನಗಳಲ್ಲಿ ಸ್ಕ್ಯಾನಿಂಗ್ ಹಾಗೂ ಗಣಕೀಕರಣ ಮಾಡುವ ಗುರಿ ಹೊಂದಲಾಗಿದೆ. ಭೂದಾಖಲೆಗಳ ಆಧುನಿಕರಣದಿಂದ ದಾಖಲೆಗಳು ಶಿಥಿಲವಾಗುವುದು, ನಕಲು ದಾಖಲೆಗಳ ಸೃಷ್ಟಿಯನ್ನು ತಡೆಗಟ್ಟಿ ಪಾರದರ್ಶಕ ಆಡಳಿತಕ್ಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ತಹಶೀಲ್ದಾರ ಶ್ರೀಮತಿ ಕವಿತಾ ಹಾಗೂ ವಿಜಯಪುರ ಉಪವಿಭಾಗಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

