ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ಭಜಂತ್ರಿ ಅಭಿಮತ
ವಿಜಯಪುರ: ಐತಿಹಾಸಿಕ ಪ್ರವಾಸಿ ತಾಣ, ಸ್ಮಾರಕಗಳ ದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳು ಇತಿಹಾಸ, ಕಲೆ, ಸಂಸ್ಕೃತಿ, ಐತಿಹಾಸಿಕ ಸ್ಥಳಗಳ ಮಹತ್ವ ತಿಳಿದುಕೊಳ್ಳಲು ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವು ಸಹಾಯಕಾರಿಯಾಗಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಅವರು ಹೇಳಿದರು.
ಶನಿವಾರ ಪ್ರವಾಸೋದ್ಯಮ ಇಲಾಖೆ ಹಾಗೂ ಕೆ.ಎಸ್.ಟಿ.ಡಿ.ಸಿ ವತಿಯಿಂದ ೨೦೨೩-೨೪ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಹೊಟೇಲ್ ಮಯೂರ ಆವರಣದಲ್ಲಿ ವಿಜಯಪುರ ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ತಳವಾರ, ಬೆಂಗಳೂರ ಕೆ.ಎಸ್.ಟಿ.ಡಿ.ಸಿ ಟೂರ್ ವ್ಯವಸ್ಥಾಪಕರಾದ ಯಶ್ವಂತ್ ಅವರೊಂದಿಗೆ ಚಾಲನೆ ನೀಡಿದರು.
ಈ ಯೋಜನೆಯಡಿ ವಿಜಯಪುರ ಜಿಲ್ಲೆಗಳಲ್ಲಿನ ಸರ್ಕಾರಿ ಪ್ರೌಢಶಾಲೆ, ಮೊರಾರ್ಜಿ ದೇಸಾಯಿ ಹಾಗೂ ಕ್ರೈಸ್ ವಸತಿ ಶಾಲೆಗಳಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಿದೆ ಎಂದು ತಿಳಿಸಿದರು.
ಹಂಪಿ, ಚಿತ್ರದುರ್ಗ, ಬದಾಮಿ, ಐಹೊಳೆ, ಪಟ್ಟದಕಲ್ಲು ಹಾಗೂ ಆಲಮಟ್ಟಿ ಪ್ರವಾಸಿ ತಾಣಗಳ ಪ್ರವಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ನಾಲ್ಕು ದಿವಸದ ಪ್ರವಾಸ ಇದಾಗಿದೆ ಎಂದರು. ಪ್ರವಾ¸ದಲ್ಲಿ ಮಕ್ಕಳ ಆರೋಗ್ಯ, ಊಟ, ಉಪಹಾರ, ವಸತಿ, ಬಸ್ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಪ್ರವಾಸದಲ್ಲಿ ಶಿಕ್ಷಕರು ಹಾಗೂ ಶಿಕ್ಷಕಿಯರು ಪ್ರವಾಸದಲ್ಲಿ ಮಕ್ಕಳ ನೇತೃತ್ವ ವಹಿಸಿದ್ದಾರೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರವಾಸಿ ಕಿಟ್ಗಳಾದ ಟೀ ಶರ್ಟ್, ಕ್ಯಾಪ್, ಬ್ಯಾಗ್, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಪುರ ನಗರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಸ್.ಜೆ.ಬಿರಾದಾರ, ವಿಜಯಪುರ ಗ್ರಾಮೀಣ ವಲಯ ದೈಹಿಕ ಶಿಕ್ಷಣ ಪರಿವೀಕ್ಷಕರದ ಚಂದ್ರಶೇಖರ್ ಕೋರೆ, ಹೋಟೆಲ್ ಮಯೂರ ಆದಿಲ್ ಶಾಹಿ ವ್ಯವಸ್ಥಾಪಕರಾದ ಶ್ರೀಮತಿ ಜಗದೇವಿ ಕೆಂಭಾವಿ, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಅನಿಲಕುಮಾರ ಬಣಜಿಗೇರ, ಅಶೋಕ ಇರಸೂರ, ಕೆಕೆಆರ್ಟಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

