ಭೂತನಾಳ-ಬಾಬಾನಗರ ಬಳಿ ಸ್ಥಳ ಗುರುತಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸೂಚನೆ
ವಿಜಯಪುರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರ(NHAI)ದವರು ರಾಜ್ಯದ ಅರಣ್ಯ ಪ್ರದೇಶದಲ್ಲಿ ಹೆದ್ದಾರಿ ಅಭಿವೃದ್ಧಿ ಕೈಗೊಂಡಿದ್ದು, ಈ ಹೆದ್ದಾರಿಯಿಂದ ಕಡಿಮೆಯಾಗುವ ಅರಣ್ಯ ಜಮೀನಿಗೆ ಬದಲಾಗಿ ವಿಜಯಪುರ ಜಿಲ್ಲೆಯಲ್ಲಿ ಕಂದಾಯ ಇಲಾಖೆ ಜಮೀನನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಉದ್ದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭೂತನಾಳ ಮತ್ತು ಬಾಬಾನಗರ ಬಳಿ 200 ಹೆಕ್ಚರ್ ಪ್ರದೇಶವನ್ನು ಗುರುತಿಸಲು ಹಾಗೂ ಈ ಪ್ರದೇಶದಲ್ಲಿ ಅರಣ್ಯ ಬೆಳೆಸುವ ಕುರಿತು ಸಮಗ್ರ ಯೋಜನೆ ರೂಪಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರವಿವಾರ ಭೂತನಾಳ ಕೆರೆಗೆ ಭೇಟಿ ನೀಡಿದ ಅವರು ಶತಮಾನದ ಹಿಂದೆ 1910 ಖ್ಯಾತ ಎಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಉಸ್ತುವಾರಿಯಲ್ಲಿ ನಿರ್ಮಿಸಿದ ಮತ್ತು ಈಗ ನವೀಕರಣ ಮಾಡಲಾಗಿರುವ ಗೆಸ್ಟಹೌಸ್ ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರ(NHAI)ದವರು ಪರಿಹಾರಾತ್ಮಕ ಅರಣ್ಯೀಕರಣಕ್ಕಾಗಿ ಮೀಸಲಿಟ್ಟಿರಯವ ಅರಣ್ಯ ಅಭಿವೃದ್ಧಿ ಕಾರ್ಯಗಳನ್ನು ಭೂತನಾಳ ಅಥವಾ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಅರಣ್ಯಾಭಿವೃದ್ಧಿಗೆ ಬಳಸಬೇಕು. ಇದರಿಂದ ವಿಜಯಪುರ ಜಿಲ್ಲೆಯ ಅರಣ್ಯ ಪ್ರದೇಶ ಹೆಚ್ಚಾಗುತ್ತದೆ ಮತ್ತು ಸರಕಾರಿ ಜಮೀನು ಅತಿಕ್ರಮಣ ತಪ್ಪಲಿದೆ. ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಇದೇ ವೇಳೆ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹೆಸರಿನಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಿ ಅಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲು ವಿಜ್ಞಾನ ಮತ್ತು ಧ್ಯಾನ ಕೇಂದ್ರ, ತಾರಾಲಯ ಸ್ಥಾಪಿಸಲು ಸ್ಥಳ ಗುರುತಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದೇ ರೀತಿ ವಿಜಯಪುರ ನಗರದ ಆಶ್ರಮ ರಸ್ತೆಯಲ್ಲಿರುವ ಕಲ್ಲಿನ ಖಣಿಯನ್ನು ಸ್ವಚ್ಛಗೊಳಿಸಿ ಅಭಿವೃದ್ಧಿ ಪಡಿಸಿ ಆ ಸ್ಥಳವನ್ನು ಸಾರ್ವಜನಿಕ ಉದ್ದೇಶಗಳಿಗೆ ಬಳಸುವ ಕುರಿತು ಅವರು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಎಸಿಎಫ್ ಭಾಗ್ಯವಂತ ಮಸೂದಿ, ಆರ್. ಎಫ್. ಓ ಸಂತೋಷ ಅಜೂರ, ಡಾ. ಮಹಾಂತೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

