ಬೆಂಗಳೂರು: ರೈತ ಪರವಾಗಿ ಎಪಿಎಂಸಿ ಕಾಯ್ದೆಗೆ ಹಲವು ತಿದ್ದುಪಡಿ ತಂದಿರುವುದು ಸೂಕ್ತವಾಗಿದೆ. ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು ಬಲಪಡಿಸಲು ಕೆಲವು ಸುಧಾರಣೆಗಳನ್ನು ತರಬೇಕಿದ್ದು, ಈ ಸಂಬಂಧ ರೈತ ಸಂಘ ಶೀಘ್ರದಲ್ಲಿ ಸುಧಾರಣೆಗೆ ಪೂರಕ ಅಂಶಗಳನ್ನು ತಮ್ಮ ಗಮನಕ್ಕೆ ತರಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ತಂದಿದ್ದ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆದಿರುವುದಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಗೆ ಕೃತಜ್ಞತೆ ಸಲ್ಲಿಸಿ ಪತ್ರ ಬರೆದಿರುವ ಅವರು, ಎಂ.ಎಸ್. ಸ್ವಾಮಿನಾಥನ್ ವರದಿ ಪ್ರಕಾರ ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವ ನೀತಿ ರೂಪಿಸಿದರೆ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ತಿದ್ದುಪಡಿ ಕಾಯಿದೆಯನ್ನು ವಾಪಸ್ಸು ಪಡೆದಿರುವುದು ಅಭಿನಂದನಾರ್ಹ. ಇದಕ್ಕಾಗಿ ವಿಶೇಷವಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ರೈತ ಸಂಘ ಕೃತಜ್ಞತೆ ಸಲ್ಲಿಸುತ್ತದೆ. ಎಪಿಎಂಸಿ ಕಾಯ್ದೆಗೆ ಕೆಲವು ತಿದ್ದುಪಡಿ ಮಾಡಿರುವುದು ಸೂಕ್ತವಾಗಿದೆ. ಎಪಿಎಂಸಿಗಳನ್ನು ಮತ್ತಷ್ಟು ರೈತ ಸ್ನೇಹಿಯಾಗಿಸಲು ಇನ್ನೂ ಹಲವಾರು ಸುಧಾರಣೆಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಚಿವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಹೋಬಳಿ ಮಟ್ಟದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಬೇಕು. ರೈತರ ಬಳಿಗೆ ಮಾರುಕಟ್ಟೆ ವಿಸ್ತಾರವಾಗಬೇಕು. ಎಲ್ಲ ಕೃಷಿ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಸುವ ನೀತಿಯನ್ನು ಗಟ್ಟಿಗೊಳಿಸಬೇಕು ಎಂದು ತಿಳಿಸಿರುವ ಅವರು, ಇನೂ ಹಲವಾರು ಸಲಹೆಗಳನ್ನು ಶೀಘ್ರದಲ್ಲಿ ಸರ್ಕಾರದ ಮುಂದೆ ಇಡಲಾಗುವುದು ಎಂದು ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
