ವಿಜಯಪುರ: ಜನ ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆಯುಂಟಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಈಗಾಗಲೇ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕಾಲುವೆ ಜಾಲದ ಮೂಲಕ ನೀರನ್ನು ಹರಿಸಲಾಗುತ್ತಿದ್ದು, ಕಟ್ಟುನಿಟ್ಟಾಗಿ ನಿಗಾವಹಿಸಿ ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿನ ಸಮರ್ಪಕ ಬಳಕೆಗೆ ಎಲ್ಲಾ ಅಧಿಕಾರಿಗಳು ಕಾರ್ಯನ್ಮೋಖರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಬುಧವಾರ ಜಿಲ್ಲಾಧಿಕಾರಿಗಳ ಕೆಸ್ವಾನ ಸಭಾಂಗಣದಲ್ಲಿ ನಡೆದ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಈಗಾಗಲೇ ನೀರಿನ ಅವಶ್ಯಕತೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರನ್ನು ಒದಗಿಸಲಾಗುತ್ತಿದೆ. ಶಾಲೆ, ಆಸ್ಪತ್ರೆ ಸೇರಿದಂತೆ ಅಗತ್ಯವಿರುವ ಕಡೆ ಆದ್ಯತೆ ಮೇಲೆ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರಿಗಾಗಿ ಖಾಸಗಿ ಬೊರವೆಲ್ಗಳು, ತೆರೆದ ಬಾವಿಗಳನ್ನು ಗುರುತಿಸಿ ನೀರಿನ ಲಭ್ಯತೆ ಪರಿಶೀಲಿಸಬೇಕು. ಕಾಲಕಾಲಕ್ಕೆ ಟಾಸ್ಕಪೋರ್ಸ್ ಸಮಿತಿ ಸಭೆ ನಡೆಸಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಟ್ಯಾಂಕರ್ ನೀರು ಅವಶ್ಯಕತೆವಿದ್ದ ಕಡೆ ಟಾಸ್ಕಪೋರ್ಸ್ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದು ನೀರು ಒದಗಿಸಲು ಕ್ರಮ ವಹಿಸಬೇಕು. ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಸಂಗ್ರಹಿಸಿಡಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಬಸವರಾಜ ಕುಂಬಾರ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕೆಬಿಜೆಎನ್ಎಲ್ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

