ಎಸ್.ಎಸ್.ಎಲ್.ಸಿ.ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
ವಿಜಯಪುರ: ಸತತ ಪರಿಶ್ರಮ ಹಾಗೂ ಆತ್ಮಸ್ಥೆöÊರ್ಯದಿಂದ ಬದುಕಿನಲ್ಲಿ ಸಾಧನೆಗೈಯ್ಯಲು ಸಾಧ್ಯವಾಗುತ್ತದೆ. ಬಡತನ ಮತ್ತು ಬದುಕಿನ ಕಷ್ಟ ಕಾರ್ಪಣ್ಯಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸತತ ಓದಿನಿಂದ ಏನನ್ನಾದರೂ ಸಾಧನೆ ಮಾಡಬೇಕೆಂಬ ಛಲದೊಂದಿಗೆ ಉತ್ತಮ ಸಾಧನೆಗೈದ ನೀವು ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದೀರಿ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯೊಂದಿಗೆ ೨೦೨೪ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಸಾಧನೆಗೈದ ಜಿಲ್ಲೆಯ ವಿವಿಧ ಮಾಧ್ಯಮಗಳಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಿಸಿದರು.
ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಗರಿಷ್ಟ ಪ್ರಮಾಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಉಪಕ್ರಮಗಳನ್ನು ಅಳವಡಿಸಿಕೊಂಡಿರುವ ಪ್ರಯುಕ್ತ ಪ್ರತಿಯೊಂದು ಕ್ಷೇತ್ರದಲ್ಲಿಯೂ ದಕ್ಷತೆ ಮತ್ತು ನಿಖರತೆಯ ಪ್ರಮಾಣ ಹೆಚ್ಚಾಗಿರುತ್ತದೆ. ಆರೋಗ್ಯಕರ ಸಾಮಾಜಿಕ ವ್ಯವಸ್ಥೆಯನ್ನು ಹಾಗೂ ಸುಸ್ಥಿರ ಸಾರ್ವಜನಿಕ ವ್ಯವಸ್ಥೆಯನ್ನು ಬಲಗೊಳಿಸಲು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಾತ್ರ ಮಾನವಸಂಪನ್ಮೂಲವನ್ನು ನಿರ್ಧರಿಸುವ ಕಾರಣದಿಂದಾಗಿ ಇಂದಿನ ವಿದ್ಯಾರ್ಥಿಗಳು ನಿರಂತರ ಓದು, ಕರಾರುವಾಕ್ ಅಧ್ಯಯನ ಇತ್ಯಾದಿ ಕೌಶಲಗಳನ್ನು ಕಾಲಕ್ಕೆ ತಕ್ಕಂತೆ ಬೆಳೆಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಶಾಲಾ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಹಲವಾರು ಪರಿಣಾಮಕಾರಿ ಯೋಜನೆಗಳ ಫಲಶ್ರುತಿಯಾಗಿ ಇಂದು ಜಿಲ್ಲೆಯ ಹಲವಾರು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಜಿಲ್ಲೆಗೆ ಮತ್ತು ಶಾಲಾ ಶಿಕ್ಷಣ ಇಲಾಖೆಗೆ ವಿಶೇಷ ಗೌರವ ತಂದುಕೊಟ್ಟಿರುವುದು ಅತ್ಯಂತ ಹೆಮ್ಮೆಯ ಮತ್ತು ಸಂತೋಷದ ಸಂಗತಿಯಾಗಿದೆ.
ವಿದ್ಯಾರ್ಥಿಗಳ ಸತತ ಪರಿಶ್ರಮ, ಶಿಕ್ಷಕರ ಕಾರ್ಯತತ್ಪರತೆ ಮತ್ತು ಇಲಾಖಾ ಅಧಿಕಾರಿಗಳ ಸಮಯೋಚಿತ ಮಾರ್ಗದರ್ಶನ ಮತ್ತು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವ್ಯವಸ್ಥೆಯ ನೈತಿಕ ಬೆಂಬಲ ಮತ್ತು ಪ್ರೋತ್ಸಾಹದಿಂದಾಗಿ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಸಾಧ್ಯವಾಗಿದ್ದು, ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದು, ಹೆಮ್ಮೆಯ ವಿಷಯ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಈ ಸಾಧನೆಗಾಗಿ ಅಭಿನಂದನಾರ್ಹವಾಗಿದ್ದಾರೆ. ಮುಂದಿನ ದಿನಗಳಲ್ಲಿಯೂ ಕೂಡ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಇನ್ನಷ್ಟು ಉತ್ತಮ ಸಾಧನೆಗೆ ಪ್ರೊತ್ಸಾಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ ಸೊನ್ನದ, ಶಿಕ್ಷಣಾಧಿಕಾರಿ ಡಾ.ಅಶೋಕ ಮ. ಲಿಮಕರ, ಕ್ಷೇತ್ರ-ಶಿಕ್ಷಣಾಧಿಕಾರಿಗಳಾದ ಬಸವರಾಜ.ತಳವಾರ.. ಪ್ರಮೋದಿನಿ ಬಳೋಳಮಟ್ಟಿ, ಬಸವರಾಜ.ಎಸ್.ಸಾವಳಗಿ ಮತ್ತು ಎಲ್ಲ ಹನ್ನೊಂದೂ ವಿದ್ಯಾರ್ಥಿಗಳ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಪಾಲಕರು, ಪೋಷಕರು ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

