ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ | ಪ್ಯಾನ್ ಇಂಡಿಯಾ ರಕ್ಷಣೆ & ಪುನರ್ವಸತಿ ಅಭಿಯಾನ
ವಿಜಯಪುರ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಒಂದು ತಿಂಗಳ ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುರ್ನವಸತಿ ಅಭಿಯಾನ ಹಮ್ಮಿಕೊಂಡಿದ್ದು, ಅಭಿಯಾನದ ಅಂಗವಾಗಿ ಜೂ.೫ ರಂದು ತಿಕೋಟಾದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ವಿವಿಧ ಇಲಾಖೆಗಳ ಜಂಟಿ ಸಹಯೋಗದಲ್ಲಿ ವಿವಿಧ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಕರಪತ್ರ ಹಾಗೂ ಸ್ಟೀಕರ್ ಅಂಟಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಕೈಗೊಂಡ ಅಭಿಯಾನದ ಸಂದರ್ಭದಲ್ಲಿ ಯಾವುದೇ ಬಾಲ ಮತ್ತು ಕಿಶೋರ ಕಾರ್ಮಿಕರು ಪತ್ತೆಯಾಗಿರುವುದಿಲ್ಲ. ಈ ಅಭಿಯಾನದಲ್ಲಿ ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಜಗದೇವಿ ಸಜ್ಜನ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಕುಮಾರಿ ನೀಲಮ್ಮಾ ಎಚ್. ಖೇಡಗಿ, ಶಿರಸ್ತೆದಾರ ಆರ್.ಎಚ್.ಸುಣಗಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಎಂ.ಕೋರೆ, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ವ್ಹಿ.ಕೆ.ಹೊಸಮನಿ, ಸಮಾಜ ಕಲ್ಯಾಣ ಇಲಾಖೆಯ ಡಿ.ಎನ್.ನಾಯಕ, ತಾ.ಪಂ.ಯ ಶ್ರೀಮತಿ ಕವಿತಾ ಬಿರಾದಾರ, ಪೊಲೀಸ್ ಇಲಾಖೆಯ ವೈ.ಬಿ.ಶಿವಾನಂದ ಅವರು ಪಾಲ್ಗೊಂಡಿದ್ದರು ಎಂದು ಕಾರ್ಮಿಕ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

