ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಿವಿಮಾತು
ವಿಜಯಪುರ: ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು ಮತ್ತು ಶಾಲಾ ಕಟ್ಟಡಗಳ ದುರಸ್ಥಿ ಮತ್ತು ಹಾಸ್ಟೇಲುಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಳೆದ ಕೆಡಿಪಿ ಸಭೆಯಲ್ಲಿಯೇ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶುಕ್ರವಾರ ಎಬಿವಿಪಿ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಗ್ರಾಮೀಣ ಮತ್ತು ನಗರ ಭಾಗದ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಒದಗಿಸುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ. ಅಲ್ಲದೇ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ತುರ್ತಾಗಿ ಕ್ರಮ ಕೈಗೊಳ್ಳಬೇಕಿರುವ ಕಡೆ ಕೂಡಲೇ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ, ಹಾಸ್ಟೇಲುಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪ್ರವೇಶಾತಿ ನೀಡಬೇಕು ಮತ್ತು ಅಲ್ಲಿ ಸೂಕ್ತ ಮೂಲಸೌಲಭ್ಯ ಒದಗಿಸಬೇಕು. ಜೊತೆಗೆ, ಹೆಚ್ಚುವರಿ ಹಾಸ್ಟೇಲುಗಳ ಅಗತ್ಯತೆ ಕುರಿತು ಕೂಡ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಈಗ ತುರ್ತು ಅಗತ್ಯವಿರುವ ಕೆಲಸಗಳನ್ನು ಕೂಡಲೇ ಮಾಡುವಂತೆ ಅಧಿಕಾರಿಗಿಳೆಗ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದೇನೆ. ಅಲ್ಲದೇ, ಮುಂದಿನ ಕೆಡಿಪಿ ಸಭೆಯಲ್ಲಿ ಈ ಕುರಿತು ಪರಿಶೀಲನೆ ಕೂಡ ನಡೆಸುತ್ತೇನೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿ ಸಂಘಟನೆಗಳು ನಿಷ್ಪಕ್ಷಪಾತವಾಗಿ ಹೋರಾಟ ಮಾಡಬೇಕು ಎಂದು ಕಿವಿಮಾತು ಹೇಳಿದ ಸಚಿವರು, ನೀಟ್ ನಲ್ಲಿಯೂ ಕೂಡ ಸಾಕಷ್ಟು ಅನ್ಯಾಯವಾಗಿದ್ದು, ಈ ಜ್ವಲಂತ ಸಮಸ್ಯೆಯ ಕುರಿತೂ ಹೋರಾಟದ ಮೂಲಕ ಗಮನ ಸೆಳೆಯಬೇಕು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಆಗಿರುವ ಶೈಕ್ಷಣಿಕ ಸಮಸ್ಯೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಬಿವಿಪಿ ಮುಖಂಡರಾದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚಿವ ಕುಳಗೇರಿ, ಕಾರ್ಯಕರ್ತರಾದ ಸಂದೀಪ ಅರಳಿಗುಂಡಿ, ಶ್ರೀಕಾಂತ, ಕವಿತಾ ಬಿರಾದಾರ, ಮಲ್ಲಿಕಾರ್ಜುನ ಮಾಳಿ ಮುಂತಾದವರು ಉಪಸ್ಥಿತರಿದ್ದರು.

