ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ | ಸಂಸದ ಜಿಗಜಿಣಗಿ ಸರ್ಕಾರಕ್ಕೆ ಒತ್ತಾಯ
ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೊಳಪಡಿಸಬೇಕು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಸರ್ಕಾರಕ್ಕೆ ಒತ್ತಾಯಿಸಿರುವ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಒಂದು ದೊಡ್ಡ ಮಟ್ಟದ ಹಗರಣವಾಗಿದೆ. ಸ್ವತ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೆಸರು ಈ ಹಗರಣದಲ್ಲಿ ತಳಕು ಹಾಕಿಕೊಂಡಿದೆ, ಹೀಗಾಗಿ ಮುಕ್ತವಾದ ತನಿಖೆ ನಡೆಯಬೇಕಾಗಿರುವುದು ಅಗತ್ಯವಾಗಿದೆ, ಸಿಬಿಐ ಅಥವಾ ನ್ಯಾಯಾಂಗ ತನಿಖೆ ನಡೆದರೆ ಮಾತ್ರ ಸತ್ಯಾಂಶ ಹೊರಬೀಳಲಿದೆ, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಗೆ ಸರ್ಕಾರ ಕೂಡಲೇ ಸಿಬಿಐಗೆ ಈ ಪ್ರಕರಣದ ತನಿಖೆಯನ್ನು ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಹಗರಣ ಹಿಗೆ ಹಗರಣಗಳಲ್ಲಿಯೇ ಮುಳುಗಿ ಹೋಗಿರುವ ರಾಜ್ಯ ಸರ್ಕಾರ ಒಂದು ರೀತಿ ಲೂಟಿ ಸರ್ಕಾರವಾಗಿದೆ ಎಂದು ಜಿಗಜಿಣಗಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

