ಅಭಿನಂದನೆ ಕೋರಲು ಬಂದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಮಾಹಿತಿ | ಸರ್ಕಾರಕ್ಕೆ ರೂ.20 ಸಾವಿರ ಕೋಟಿ ಹೊರೆ
ಬೆಂಗಳೂರು: ಆ.1ರಿಂದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ.
ಕರ್ನಾಟಕ ಸರ್ಕಾರಿ ನೌಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟ ಸಂತೋಷದಲ್ಲಿ ಅಭಿನಂದನೆ ಕೋರಲು ಬಂದ ನೌಕರರಿಗೆ ಸಿಎಂ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನೌಕರರ ನಿಯೋಗದಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಗಿದೆ. ಈ ವೇಳೆ ಸರ್ಕಾರದ ಕಾರ್ಯಕ್ರಮ ಜನರಿಗೆ ತಲುಪಿಸಿ. ಸರ್ಕಾರದ ನಿಲುವುಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸಿ ಎಂದು ನೌಕರರಿಗೆ ಸಿಎಂ ಕಿವಿಮಾತು ಹೇಳಿದ್ದಾರೆ.
ಇದರಿಂದ ಸರ್ಕಾರಕ್ಕೆ 20 ಸಾವಿರ ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದರು.
ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ಜಾರಿ ತರುವ ಬಗ್ಗೆ ಹೇಳಿದ್ದಾರೆ. ಇದರಿಂದ 25 ಲಕ್ಷ ನೌಕರರ ಕುಟುಂಬಗಳಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆ ಆಗಸ್ಟ್ ತಿಂಗಳಲ್ಲಿ ಜಾರಿ ಮಾಡ್ತೇವೆ ಅಂತ ಸಿಎಂ ಹೇಳಿದ್ದಾರೆ.
ಶೇ 10.5 ವೇತನ ಪರಿಷ್ಕರಣೆ
ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಹಿಂದಿನ ಸರಕಾರದ ಅವಧಿಯಲ್ಲಿ ಶೇ.17ರ ಮಧ್ಯಂತರ ಪರಿಹಾರ ನೀಡಲಾಗಿದ್ದು, ಅಂತಿಮವಾಗಿ ಶೇ 10.5 ವೇತನ ಪರಿಷ್ಕರಣೆಯಾಗಲಿದೆ. ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿಗೆ ಸಾಕಷ್ಟು ಒತ್ತಡ ಸರ್ಕಾರದ ಮೇಲಿತ್ತು.
ಮೊದಲ ದಿನದ ಅಧಿವೇಶನದ ಬಳಿಕ ಸೋಮವಾರ ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಿತು. ಸಂಪುಟ ಕಾರ್ಯಸೂಚಿಯಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು, ಎಲ್ಲಾ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಸಂಪನ್ಮೂಲ ಕೊರತೆ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆಯಂತೆ 7 ನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಮುಂದೂಡುತ್ತಾ ಬಂದಿತ್ತು.
ಈ ವೇಳೆ ಷಡಕ್ಷರಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ,’ ಇಂದು ಸರ್ಕಾರಿ ನೌಕರರಿಗೆ ಸಂತೋಷದ ದಿನ.
13.50 ಲಕ್ಷ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡುವುದಾಗಿ ಸರ್ಕಾರ ಹೇಳಿದೆ. ಹೀಗಾಗಿ ಸಿಎಂ ಭೇಟಿ ಮಾಡಿ ನಾವು ಅಭಿನಂದನೆ ಸಲ್ಲಿಸಿದ್ದೇವೆ. ಆಗಸ್ಟ್ 1ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಯಾಗಲಿದೆ ಎಂದಿದ್ದಾರೆ.

