ಡೆಂಗ್ಯೂ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ
ವಿಜಯಪುರ: ಮನೆಯ ಸುತ್ತಮುತ್ತಲಿನ ಸಂಗ್ರಹಗೊಳ್ಳುವ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಗಳು ಕಚ್ಚುವ ಮೂಲಕ ಡೆಂಗ್ಯೂ ಹರಡಲಿರುವುದರಿಂದ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.
ಇಂಡಿಯ ಮಿನಿ ವಿಧಾನಸೌಧದ ಆವರಣದಲ್ಲಿ ಬುಧವಾರ ಹಮ್ಮಿಕೊಂಡ ಡೆಂಗ್ಯೂ ಜನಜಾಗೃತಿಯ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಮಳೆಗಾಲ ಆರಂಭವಾಗಿರುವುದರಿಂದ ವಿವಿಧ ನೀರು ಸಂಗ್ರಹವಾಗದಂತೆ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ನೋಡಿಕೊಳ್ಳಬೇಕು. ಘನತ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ವಿಲೇ ಮಾಡಬೇಕು, ಸಂಗ್ರಹಿಸಿರುವ ಮನೆಯಲ್ಲಿನ ತೊಟ್ಟಿ ಬ್ಯಾರಲ್, ಡ್ರಮ್ಗಳಲ್ಲಿ ಸಂಗ್ರಹ ಮಾಡಿದ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಚಗೊಳಿಸುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಎಂದು ಹೇಳಿದರು.
ಡೆಂಗ್ಯೂ ಜಾಗೃತಿ ಜಾಥಾವು ಇಂಡಿಯ ಮಿನಿ ವಿಧಾನಸೌಧದಿಂದ ಬಸವೇಶ್ವರ ಸರ್ಕಲ್, ಮಹಾವೀರ ಸರ್ಕಲ್ ಮಾರ್ಗವಾಗಿ ಸಂಚಾರಿ ಜಾಗೃತಿ ಮೂಡಿಸಿತು.
ಕಾರ್ಯಕ್ರಮದಲ್ಲಿ ಇಂಡಿ ಉಪ ವಿಭಾಗಾಧಿಕಾರಿ ಆಬೀದ ಗದ್ಯಾಳ, ತಹಶೀಲ್ದಾರ ಸಂಜಯ ಇಂಗಳೆ, ತಾಲೂಕಾ ಆರೋಗ್ಯಾಧಿಕಾರಿ ಡಾ.ರಚನಾ ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ದೈಹಿಕ ಶಿಕ್ಷಕ ಎಚ್.ಕೆ.ಮಳಗೊಂಡ, ಆರೋಗ್ಯ ಇಲಾಖೆ, ಪುರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪ್ಯಾರಾ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು, ಉಪನ್ಯಾಸಕರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಸಾರ್ವಜನಿಕ ಆಸ್ಪತ್ರೆಗೆ ಭೇಟಿ
ನಂತರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಸ್ವಚ್ಛತೆ, ರೋಗಿಗಳಿಗೆ ಒದಗಿಸಲಾಗುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದ, ಅವರು ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡು ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

