ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪ ಲೋಕಾಯುಕ್ತ ನ್ಯಾ.ಕೆ.ಎನ್ ಫಣೀಂದ್ರ ಜಿಲ್ಲಾ ಪ್ರವಾಸ
ವಿಜಯಪುರ: ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್ ಫಣೀಂದ್ರ ಅವರು ಆಗಸ್ಟ ಮಾಹೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸನ್ನದ್ದರಾಗಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ದಿನಾಂಕ ೯ ರಿಂದ ೧೩ರವರೆಗೆ ಪ್ರವಾಸ ಕೈಗೊಂಡು ವಿವಿಧ ಅಧಿಕಾರಿಗಳೊಂದಿಗೆ ಸಭೆ, ವಿವಿಧ ಕಚೇರಿ, ಆಸ್ಪತ್ರೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ವಕೀಲರೊಂದಿಗೆ ಸಂವಾದ, ಸಾರ್ವಜನಿಕರ ಕುಂದು ಕೊರೆತ ಅಹವಾಲುಗಳ ಮಾಹಿತಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಮತ್ತು ಬಾಕಿ ಇರುವ ಕಡತಗಳ ಕುರಿತು ಸಭೆ ನಡೆಸಲಿದ್ದು, ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಕಚೇರಿ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳು ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸೂಚಿಸಿದ ಅವರು, ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ದೂರುಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಎಸ್.ಪಿ ಟಿ. ಮಲ್ಲೇಶಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಲೋಕಾಯುಕ್ತ ಪೋಲೀಸ್ ಡಿವೈಎಸ್ಪಿ ಸುರೇಶ ರೆಡ್ಡಿ, ಪೋಲಿಸ್ ಇನ್ಸಪೆಕ್ಟರಗಳಾದ ಆನಂದ ಠಕ್ಕಣ್ಣವರ, ಆನಂದ ಡೋಣಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯ ಆಜೂರ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

