ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾಹಿತಿ
ವಿಜಯಪುರ: ಕರ್ನಾಟಕ ಸುವರ್ಣ-ಸಂಭ್ರಮ-೫೦ರ ಅದ್ದೂರಿಯಾಗಿ ಆಚರಣೆಯೊಂದಿಗೆ ಸಂಭ್ರಮವನ್ನು ವೈಶಿಷ್ಟ ಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸುವರ್ಣ-ಸಂಭ್ರಮ-೫೦ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹೊರನಾಡಿನಲ್ಲಿ ಆಯೋಜಿಸುವ ಕಾರ್ಯಕ್ರಮ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದ ವಿಜಯಪುರ ಸೇರಿದಂತೆ ರಾಯಚೂರ, ಮಂಗಳೂರು, ಮೈಸೂರು ೪ ಗಡಿ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮ ಬೆಳಗಾವಿ ವಿಭಾಗದ ಪ್ರಥಮ ಕಾರ್ಯಕ್ರಮವಾಗಿದೆ.
ಜಿಲ್ಲೆಯಲ್ಲಿ ಆಯೋಜಿಸುವ ಕಾರ್ಯಕ್ರಮವನ್ನು ಅತ್ಯಂತ ವೈಶಿಷ್ಟಪೂರ್ಣವಾಗಿ ಹಮ್ಮಿಕೊಂಡಿದ್ದು, ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರ ಶ್ರೀ ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ ಆಗಸ್ಟ ೨೮ ರಂದು ಮಾನ್ಯ ಮುಖ್ಯ ಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕದ ಹಿರಿಯ ಚೇತನಗಳಾದ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ, ಪೂಜ್ಯ ಡಾ.ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭವು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಅಚ್ಚುಕಟ್ಟಾಗಿ ಹಾಗೂ ವಿಜ್ರಂಭಣೆಯಿಂದ ಆಯೋಜಿಸಲು ಈಗಾಗಲೇ ಶ್ರೀ ದಾನಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ಅಲ್ಲಿಯ ದೇವಸ್ಥಾನ ಟ್ರಸ್ಟ್ನ ಸದಸ್ಯರೊಂದಿಗೆ ಸಭೆ ನಡೆಸಿ ಎಲ್ಲ ರೀತಿಯ ಸಹಾಯ ಸಹಕಾರ ಕೋರಲಾಗಿದೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಜತ್ತ ತಾಲೂಕಿನಲ್ಲಿ ದೇವಸ್ಥಾನ ಇರುವುದರಿಂದ ಸಾಂಗ್ಲಿಯ ಜಿಲ್ಲಾಡಳಿದ ಸಹಕಾರ ಕೋರಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಎಲ್ಲ ಚುನಾಯಿತ ಜನ ಪ್ರತಿನಿದಿಗಳು ಸಹಕಾರದೊಂದಿಗೆ ಅದ್ದೂರಿಯಾಗಿ ಸಂಭ್ರಮದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಅಂದು ಸ್ಥಳೀಯ ಕಲಾವಿದರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಇದರೊಂದಿಗೆ ಗಡಿಭಾಗದ ಸಮಸ್ಯೆಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸ್ವಾಗತ, ಮೆರವಣಿಗೆ, ವೇದಿಕೆ ನಿರ್ಮಾಣ, ಸಂಸ್ಕೃತಿಕ ಕಾರ್ಯಕ್ರಮ, ವಿಚಾರ ಗೋಷ್ಠಿ, ಸಾರಿಗೆ, ವಸತಿ, ಪ್ರಚಾರ, ಆರೋಗ್ಯ, ಸ್ವಚ್ಚತಾ, ಭದ್ರತೆ ಹಾಗೂ ಊಟೋಪಚಾರ ಸಮಿತಿಗಳನ್ನು ರಚಿಸಲಾಗುವುದು. ಅಚ್ಚು ಕಟ್ಟಾಗಿ ಕರ್ತವ್ಯ ನಿರ್ವಹಿಸಲು ಸಮಿತಿಗಳು ಜವಾಬ್ದಾರಿಯುತವಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ನೋಡಿಕೊಳ್ಳುವಂತೆ ರಾಜ್ಯ ಮಟ್ಟದ ಅಧಿಕಾರಿಯೋರ್ವರನ್ನು ನೇಮಿಸಲಾಗುವುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿರುವುದರಿಂದ, ಸುಸಜ್ಜಿತ ಶಾಮಿಯಾನ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ವಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಂತೆ ಎಲ್ಲರೂ ಸಹಕರಿಸುವಂತೆ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಸಲು ಜಿಲ್ಲಾಡಳಿತ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಸದಸ್ಯರಾದ ಸಂಜೀವಕುಮಾರ ಅತಿವಾಳೆ, ಅಶೋಕ ಚಂದರಗಿ, ಡಾ.ಎಮ್.ಎಸ್ ಮಧಬಾವಿ, ಭಗತ್ರಾಜ್, ಶಿವರೆಡ್ಡಿ ಖೇಡದ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಚಲವಾದಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಹೆಚ್ಚುವರಿ ಪಿಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಬೋವಿ, ದಾನಮ್ಮ ದೇವಿ ದೇವಸ್ಥಾನ ಟ್ರಸ್ಟನ ಉಪಾಧ್ಯಕ್ಷ ಚಂದ್ರಶೇಖರ ಗೊಬ್ಬಿ, ನಿರ್ದೇಶಕ ಪ್ರಕಾಶ ಗಣಿ ಹಾಗೂ ವಿವಿಧ ತಾಲೂಕಿನ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

