ಸಿಂದಗಿ: ದಂಡಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ
ಮಾತನಾಡಿದರು.
ಆ.೧೫ರಂದು ಆಚರಿಸಲ್ಪಡುವ ಸ್ವಾತಂತ್ರೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆಯಲ್ಲಿ ಎಲ್ಲರೂ ಭಾಗಿಯಾಗಬೇಕು. ಅಂದು ಬೆಳಗ್ಗೆ ೭.೪೫ರ ಒಳಗೆ ಎಲ್ಲ ಸರ್ಕಾರಿ, ಅರೇ ಸರ್ಕಾರಿ ಕಚೇರಿ ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜಾ ರೋಹಣ ನಡೆಸಬೇಕು. ನಂತರ ೮.೦೦ಕ್ಕೆ ತಹಶೀಲ್ದಾರ್ ಆವರಣಕ್ಕೆ ಆಗಮಿಸಬೇಕು, ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ ಸರಿಯಾಗಿ ೯ ಗಂಟೆಗೆ ಆರಂಭವಾಗುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು. ಆಯಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ಹಂಚಿಕೆಯಂತೆ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕಾರ್ಯಕ್ರಮಕ್ಕೆ ತಾಲೂಕಾಡಳಿತದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತ ಅವರ ಪ್ರತಿನಿಧಿಗಳು ಖರ್ಚು ನೀಡುವುದಾಗಿ ಸಭೆಯಲ್ಲಿ ಹೇಳಿ ಹೋಗುತ್ತಾರೆ ಆದರೆ ತಾಲೂಕಿನ ಕೆಲವು ಇಲಾಖೆಯಿಂದ ಸರಿಯಾದ ಸ್ಪಂದನೆ ಮತ್ತು ಆರ್ಥಿಕ ನೆರವು ದೊರೆಯುವುದಿಲ್ಲ. ಮೊಬೈಲ್ ಸ್ವೀಚ್ ಆಫ್ ಮಾಡಿರುತ್ತಾರೆ. ಸಭೆಯಲ್ಲಿ ಜವಾಬ್ದಾರಿ ವಹಿಸಿಕೊಂಡ ಹೋದ ಅಧಿಕಾರಿಗಳು ಆರ್ಥಿಕ ನೆರವು ನೀಡುವುದಿಲ್ಲ ಎಂದು ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಮುಂಬರುವ ದಿನಮಾನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಿ ಎಂದು ತಾಲೂಕು ದಂಡಾಧಿಕಾರಿಗಳು ಹೇಳಿದರು.
ಇದೇ ಸಂದರ್ಭದಲ್ಲಿ ಇತ್ತೀಚಗೆ ನಿವೃತ್ತರಾದ ವೀರಯೋಧರನ್ನು, ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ, ಪ್ರಗತಿಪರ ರೈತರಿಗೆ, ಮತ್ತು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವುದು.
ವಿವಿಧ ತಂಡಗಳ ರಚನೆ: ಕ್ರೀಡಾಂಗಣದ ವ್ಯವಸ್ಥೆ, ವೇದಿಕೆ ಮತ್ತು ಕಾರ್ಯಕ್ರಮ ನಿರ್ವಹಣೆ, ಪಥ ಸಂಚಲನ ಹಾಗೂ ಧ್ವಜದ ವ್ಯವಸ್ಥೆ, ಆರೋಗ್ಯ ಮತ್ತು ಮುಂಜಾಗ್ರತಾ ಕ್ರಮಗಳು, ಸ್ವಚ್ಛತೆ, ಕಾವಯತ್, ಎಲ್ಲ ವೃತ್ತಗಳಿಗೂ ದೀಪಾಲಂಕಾರ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಯಾವುದೇ ಲೋಪದೋಷ ಆಗದಂತೆ ಕಾರ್ಯಕ್ರಮ ನಡೆಯುವಂತಾಗಬೇಕು. ಸರಕಾರಿ ಶಾಲೆಯ ಮಕ್ಕಳು, ಅನುದಾನ ರಹಿತ, ಅನುದಾನಿತ ಶಾಲಾ ಮಕ್ಕಳಿಂದ ಬ್ಯಾಂಡ್, ಸಾಂಸ್ಕೃತಿಕ ಕಾರ್ಯಕ್ರಮಗಳು, ಲಘು ಉಪಹಾರ, ಹಾಲು ವಿತರಣೆ, ಆರೋಗ್ಯ, ಅಗ್ನಿಶಾಮಕ ಇಲಾಖೆಯಿಂದ ತುರ್ತು ಸೇವೆ ಸಿದ್ಧತೆ, ಅರಣ್ಯ ಇಲಾಖೆಯಿಂದ ಉಪನ್ಯಾಸ ಸೇರಿದಂತೆ ಹಲವಾರು ವಿಷಯಗಳ ನಿರ್ವಹಣೆಯ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.
ಸೇರಿದಂತೆ ವಿವಿಧ ವ್ಯವಸ್ಥೆಗಳಿಗಾಗಿ ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.
ತಾಲೂಕು ಆಡಳಿತ ಹಮ್ಮಿಕೊಳ್ಳುವ ಪ್ರಮುಖ ಪೂರ್ವಭಾವಿ ಸಭೆಗಳಲ್ಲಿ ಹಲವು ಇಲಾಖೆಯ ಅಧಿಕಾರಿಗಳು ಗೈರಾಗುತ್ತಿರುವುದಕ್ಕೆ ಮಾಧ್ಯಮದವರು ಆಕ್ರೋಶ ವ್ಯಕ್ತಪಡಿಸಿದರು. ಸಭೆಗೆ ಗೈರಾಗುವ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮಕೈಗೊಳ್ಳುವಂತೆ ತಿಳಿಸಲಾಯಿತು.
ಇದೇ ಸಂದರ್ಭದಲ್ಲಿ ನೌಕರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ದೈಹಿಕ ನಿರ್ದೇಶಕ ರವಿ ಗೋಲಾ, ಪಿಎಸ್ಐ ಆರೀಫ್ ಮುಷಾಪುರಿ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಉಪನೋಂದಣಾಧಿಕಾರಿ ಎಮ್.ಆರ್.ಪಾಟೀಲ, ಸಿಡಿಪಿಒ ಶಂಭುಲಿಂಗ ಹಿರೇಮಠ, ಹೆಸ್ಕಾಂ ಎಇಇ ಸಿ.ಡಿ.ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

