ವಿಜಯಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ
ವಿಜಯಪುರ: ಸಾಮಾಜಿಕ ನ್ಯಾಯ, ಶೈಕ್ಷಣಿಕ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಒಳಗೊಂಡಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿರುವ ನಮ್ಮ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದಾದ್ಯಂತ ಸಂಚಲನ ಉಂಟುಮಾಡಿರುವ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಬದುಕಿನಲ್ಲಿ ಬೆಳಕು ಮತ್ತು ಭರವಸೆ ತುಂಬುವಲ್ಲಿ ಸಫಲವಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ನಾಡಿನ- ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜಿಲ್ಲೆ ಸೇರಿದಂತೆ ರಾಷ್ಟ್ರದ ವಿವಿಧ ಮಹನೀಯರನ್ನು ಸ್ಮರಿಸಿ ಸಂದೇಶ ನೀಡಿ, ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ಅನುಮೋದನೆಯಾಗಿದ್ದು, ಸರ್ಕಾರದಿಂದ ರೂ.೪೯ ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆಯಾಗಿದೆ. ಅಂದಾಜು ಪತ್ರಿಕೆ ಅನುಮೋದನೆ ಪಡೆದುಕೊಂಡು ಅತೀ ಶೀಘ್ರದಲ್ಲಿಯೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಿ.ಎಸ್.ಆರ್. ಅನುದಾನದಲ್ಲಿ ವಿಜಯಪುರ ನಗರದಲ್ಲಿರುವ ತಾಜ್ಬಾವಡಿ, ಗೋಲಗುಮ್ಮಟ, ಬಬಲೇಶ್ವರ ತಾಲೂಕಿನಲ್ಲಿರುವ ಮಮದಾಪುರ ಕೆರೆ ಮತ್ತು ಅದರ ಸುತ್ತಲಿನ ಅರಣ್ಯ ಪ್ರದೇಶ, ಕುಮಟಗಿಯಲ್ಲಿರುವ ಬೇಸಿಗೆ ಅರಮನೆ, ಕಪ್ಪು ತಾಜ್ಮಹಲ್ ಎಂದು ಪ್ರಸಿದ್ಧಿಯಾಗಿರುವ ಇಬ್ರಾಹಿಂ ರೋಜಾ ಹಾಗೂ ಇನ್ನಿತರ ಸ್ಮಾರಕಗಳನ್ನು ಮತ್ತು ಅವುಗಳ ಆವರಣದಲ್ಲಿರುವ ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸುವ ಮತ್ತು ಸೌಂದರ್ಯೀಕರಣಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಬುದ್ಧ-ಬಸವ-ಡಾ.ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸರ್ವರಿಗೂ ಸಮ ಬಾಳು -ಸಮ ಪಾಲು ಎಂಬ ನೀತಿಯಂತೆ, ರಾಷ್ಟ್ರಪಿತ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕಲ್ಪನೆಯಂತೆ ಹಾಗೂ ಭಾರತದ ಅಣುವಿಜ್ಞಾನಿ ಮತ್ತು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರವರು ಕಂಡ ೨೧ನೇ ಶತಮಾನದ ಪ್ರವರ್ಧಮಾನದ ಪ್ರಬುದ್ಧ ಭಾರತದ ಪರಿಕಲ್ಪನೆಗಳಡಿಯಲ್ಲಿ ಸರ್ವರ ಏಳ್ಗೆ ಮತ್ತು ಅಭಿವೃದ್ಧಿಗಾಗಿ ನಾವೆಲ್ಲರೂ ಧರ್ಮಾತೀತವಾಗಿ-ಜಾತ್ಯಾತೀತವಾಗಿ ಅಹರ್ನಿಸಿ ಶ್ರಮಿಸಬೇಕಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆ ಮಹಾಪೌರ ಶ್ರೀಮತಿ ಮಹೇಜಬಿನ್ ಅಬ್ದುಲರಜಾಕ ಹೊರ್ತಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಅಬ್ದುಲ್ ಹಮೀದ್ ಮುಶ್ರೀಫ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

೩೨೩೯ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿ
ಕೈಗಾರಿಕೆ ಅಭಿವೃದ್ಧಿಗಾಗಿ ಒಟ್ಟು ೩೨೩೯ ಎಕರೆ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ಕ್ರಮವಹಿಸಲಾಗಿದ್ದು, ಈಗಾಗಲೆ ೨೪೫ ಕೋಟಿ ರೂಪಾಯಿಗಳ ಬಂಡವಾಳ ಹೂಡಿ ಕೊಲ್ಹಾರ ತಾಲೂಕಿನಲ್ಲಿ ೬೧೪ ಎಕರೆ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಹೊಸ ಕೈಗಾರಿಕೆಗಳ ಸ್ಥಾಪನೆಗಾಗಿ ೪೧೧ ನಿವೇಶನಗಳು ಲಭ್ಯವಿರುತ್ತವೆ. ಅದರಂತೆಯೇ ಇಂಡಿ ತಾಲೂಕಿನ ಬೂದಿಹಾಳ ಹಾಗೂ ಮುದ್ದೇಬಿಹಾಳ ತಾಲೂಕಿನಲ್ಲಿ ಕ್ರಮವಾಗಿ ೧೯ ಹಾಗೂ ೦೬ ಎಕರೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಹಂತದಲ್ಲಿದೆ ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ ೫ ಸಾವಿರ ಮೆ.ವ್ಯಾ. ಪವನ್ ವಿದ್ಯುತ್ ಘಟಕ
ಗಾಳಿಯಿಂದ ವಿದ್ಯುತ್ ತಯಾರಿಸಲು ವಿಜಯಪುರ ಜಿಲ್ಲೆಯು ದೇಶದಲ್ಲೇ ಅತ್ಯಂತ ಪ್ರಶಸ್ತವಾದ ತಾಣವಾಗಿದೆ. ಇದನ್ನು ಮನಗಂಡಿರುವ ಸುಜ್ಲಾನ್ ಕಂಪನಿಯು ಜಿಲ್ಲೆಯಲ್ಲಿ ೫,೦೦೦ ಮೆಗಾವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಘಟಕ ಸ್ಥಾಪಿಸಲು ಮುಂದಾಗಿದೆ. ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಇದಕ್ಕಾಗಿ ೧೦೦ ಎಕರೆ ಭೂಮಿಯನ್ನು ಕಂಪನಿಗೆ ಒದಗಿಸಲಾಗುವುದು. ರೆನೈಸಾನ್ಸ್ ಕಂಪನಿಯು ಜಿಲ್ಲೆಯಲ್ಲಿ ಸೌರಫಲಕ ಬಿಡಿ ಭಾಗಗಳ ತಯಾರಿಕೆ ಘಟಕವನ್ನು ಪ್ರಾರಂಭಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ೬,೦೦೦ ಕೋಟಿ ರೂ.ಗಳನ್ನು ಬಂಡವಾಳವಾಗಿ ಹೂಡಲಿದೆ. ಈ ನಿಟ್ಟಿನಲ್ಲೂ ಕಂಪನಿಯೊಂದಿಗೆ ಮಾತುಕತೆ ನಡೆದಿದ್ದು, ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಕಂಪನಿಯು ತನ್ನ ಚಟುವಟಿಕೆಗಳನ್ನು ಆರಂಭಿಸಲಿದೆ. ಮುಂದಿನ ೬-೭ ವರ್ಷಗಳಲ್ಲಿ ಕಂಪನಿಯು ೨೦,೦೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಿದೆ.ಇಲ್ಲಿಗೆ ಸಮೀಪದ ಮುಳವಾಡದಲ್ಲಿ ಕೆಐಎಡಿಬಿ ವ್ಯಾಪ್ತಿಯಲ್ಲಿ ಇರುವ ೩೦೦ ಎಕರೆ ಪ್ರದೇಶದಲ್ಲಿ ಉತ್ಪಾದನಾ ಕ್ಲಸ್ಟರ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

