ಇಂಡಿ: ಕೊಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ್ ಧನಪಾಲಶೆಟ್ಟಿ ದೇವೂರ ಅವರಿಗೆ ಎಬಿವಿಪಿ ಕಾರ್ಯಕರ್ತರು ಶನಿವಾರ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರು ಪ್ರಮುಖ ಬೀದಿಯಲ್ಲಿ ಪ್ರತಿಭಟಿಸಿ ತದನಂತರ, ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ನಿರ್ಲಕ್ಷ್ಯ ವಹಿಸಿರುವ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಸಚಿನ ದಾನಗೊಂಡ ಮಾತನಾಡಿ, ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿನಂತೆ ವೈದ್ಯನಾದವನು ದೇವರಿಗೆ ಸಮನಾದವನು ಎಂಬ ಮಾತಿದೆ. ಆದರೆ ಪಶ್ಚಿಮ ಬಂಗಾಳದ ಕೊಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಹಾಲ್ ನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಮಾನವೀಯ ಸಮಾಜ ತಲೆತಗ್ಗಿಸುವಂತೆ ಆಗಿದೆ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಅತ್ಯಾಚಾರದಂತಹ ಘಟನೆ ನಡೆಯಲು ಮೂಲ ಕಾರಣ ಅಲ್ಲಿನ ರಾಜ್ಯ ಸರ್ಕಾರ. ಈ ಹಿಂದಿನ ಎಷ್ಟೋ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯನ್ನು ವಿಧಿಸದೆ ಆರೋಪಿಗಳ ಬೆನ್ನಿಗೆ ನೇರವಾಗಿ ಮಮತಾ ಬ್ಯಾನರ್ಜಿ ಸರ್ಕಾರ ನಿಂತಿರುವುದು ಹಲವು ಪ್ರಕರಣಗಳಲ್ಲಿ ಕಂಡು ಬಂದಿದೆ. ಇಂತಹ ಸರ್ಕಾರಗಳ ನಡೆಯಿಂದ ಮತ್ತೆ ಮತ್ತೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪಶ್ಚಿಮ ಬಂಗಾಳದ ಮಮತಾ ಸರ್ಕಾರವು ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಈ ಹಿಂದೆ ಟಿಎಂಸಿ ಗೂಂಡಾಗಳಿಂದ ಇಂತಹ ಅನೇಕ ಅತ್ಯಾಚಾರಗಳು ನಡೆದಿವೆ ಆದರೆ ಮಮತಾ ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಈ ಘಟನೆಗಳು ಮಾನವೀಯತೆಗೆ ನಾಚಿಕೆಗೇಡು. ಈ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಮಮತಾ ಸರ್ಕಾರದ ವಿರುದ್ಧ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಪ್ರತಿಭಟನೆ ಕರೆ ನೀಡಿ ಪ್ರತಿಭಟಿಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿರಸ್ತೆದಾರ ಎಸ್ ಆರ್ ಮುಜಗೊಂಡ ಹಾಗೂ ಎಬಿವಿಪಿ ಸಮರ್ಥ ಗಾಯಕವಾಡ, ರವಿ ಕಲಶೆಟ್ಟಿ, ವಿಶ್ವನಾಥ ಸಗರಗೊಂಡ, ಸಿದ್ದು ವಾಲಿಕಾರ, ಈರಣ್ಣ ಬಣದಾಳ, ನಾಗಪ್ಪ ಬೇಡರ, ಗಣೇಶ ಹಂಜಗಿ, ಭಾಗ್ಯಶ್ರೀ, ದೀಪಾ, ಅಶ್ವಿನಿ, ಸರಸ್ವತಿ, ರಾಧಿಕಾ ಹಾಗೂ ಇನ್ನೂ ಅನೇಕ ಎಬಿವಿಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

