ಕಾನೂನು ಅರಿವು ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಸಲಹೆ
ವಿಜಯಪುರ: ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳು ಒಂದೇ ಆಗಿದ್ದು, ಸಾರ್ವಜನಿಕರ ಅಗತ್ಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಅವರಿಗೆ ಕಾನೂನು ಕುರಿತಾಗಿ ಜಾಗೃತಿ ಮೂಡಿಸಿ ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಹೇಳಿದರು.
ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ನ್ಯಾಯಾಂಗ ಘಟಕ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಜಯಪುರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ವಿಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ಶನಿವಾರ ನಡೆದ ಉತ್ತಮ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನ್ಯಾಯಾಂಗದ ಮೇಲೆ ಜನರು ತುಂಬಾ ವಿಶ್ವಾಸವಿಟ್ಟಿದ್ದು, ಕಾನೂನು ಸೇವಾ ಪ್ರಾಧಿಕಾರದ ಮೂಲಕ ಅಸಹಾಯಕರಿಗೆ ನ್ಯಾಯ ದೊರಕಿಸಿಕೊಡುವ ಸೇವಾ ಪ್ರಾಧಿಕಾರದ ಮೂಲಕ ಕಾಲಕಾಲಕ್ಕೆ ಹಮ್ಮಿಕೊಳ್ಳುವ ಲೋಕ ಅದಾಲತ್ನಲ್ಲಿ ಹಲವಾರು ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಜನರ ನೆಮ್ಮದಿಯ ಬದುಕಿಗೆ ಕಾರಣವಾಗಿದೆ. ಕಾನೂನು ಸೇವಾ ಪ್ರಾಧಿಕಾರದಿಂದ ನಡೆಯುವ ಕಾನೂನು ಅರಿವು ಕಾರ್ಯಕ್ರಮದ ಮೂಲಕ ಜನರಿಗೆ ಕಾನೂನಿನ ಕುರಿತಾಗಿ ತಮಗೆ ಇರುವ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಿ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಉಪ ಲೋಕಾಯುಕ್ತರಿಗೆ ಜಿಲ್ಲಾ ನ್ಯಾಯಾಧೀಶರ ವತಿಯಿಂದ ಶ್ರೀ ಸಿದ್ಧೇಶ್ವರ ಶ್ರೀಗಳ ಆರು ಸಂಪುಟಗಳ ಕೃತಿಯನ್ನು ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶಿವಾಜಿ ನಲವಡೆ, ಹಿರಿಯ ಸಿವ್ಹಿಲ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್.ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಸೇರಿದಂತೆ ನ್ಯಾಯಾಧೀಶರು ಉಪಸ್ಥಿತರಿದ್ದರು.

