ವಿವಿಧ ಗ್ರಾ.ಪಂ.ಗಳಿಗೆ ಭೇಟಿ ನೀಡಿದ ಜಿಪಂ ಸಿಇಓ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ರವರು ವಿಜಯಪುರ ತಾಲೂಕಿನ ಹೆಗಡಿಹಾಳ ಮತ್ತು ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಶುಕ್ರವಾರ ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಕುಮನಾಳ ಗ್ರಾಮದಲ್ಲಿ ಹೊಸ ಕಟ್ಟಡದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ನಿಯಮಿತವಾಗಿ ಪೌಷ್ಠಿಕ ಆಹಾರ ಮತ್ತು ಪೀಠೋಪಕರಣ ಒದಗಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.
ಹೆಗಡಿಹಾಳ ಗ್ರಾಮದ ಎಚ್.ಪಿ.ಎಸ್ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿದ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬಳಿಕ ಗ್ರಂಥಾಲಯ, ಅಂಗನವಾಡಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರಗಳಿಗೆ ಭೇಟಿ ನೀಡಿ, ಸ್ವಚ್ಛತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಹಿಟ್ಟಿನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಸ್ಮಶಾನ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಅವರು, ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಪ್ರತಿದಿನ ಸಂಗ್ರಹಿಸಿರುವ ಕಸವನ್ನು ವಿಂಗಡಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಟ್ಟಿನಹಳ್ಳಿ ಗ್ರಾಮದ ಅಮೃತ ಸರೋವರ ಕಾಮಗಾರಿಯನ್ನು ವೀಕ್ಷಣೆ ಮಾಡಿ,ಕೆರೆಯ ದಡದಲ್ಲಿ ವಿವಿಧ ರೀತಿಯ ಸಸಿಗಳನ್ನು ನೆಟ್ಟು ಸೌಂದರ್ಯೀಕರಣಗೊಳಿಸಲು ಸೂಚಿಸಿದರು.
ಬಳಿಕ ಗ್ರಂಥಾಲಯ, ಶಿಶುಪಾಲನ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ, ಸಹಾಯಕ ನಿರ್ದೇಶಕ (ಗ್ರಾ.ಉ) ಕಾಸಿಮಸಾಬ ಮಸಳಿ, ಜಿಲ್ಲಾ ಪಂಚಾಯತಿಯ ಎ.ಡಿ.ಪಿ.ಸಿ ಪೃಥ್ವಿರಾಜ ಪಾಟೀಲ, ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಎಸ್ ಬಳೊಲಮಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ ಜಿಗಳೂರ, ಹೆಡಗಿಹಾಳ ಗ್ರಾಮ ಪಂಚಾಯತ ಅಭಿವೃಧ್ಧಿ ಅಧಿಕಾರಿ ಸುರೇಶ ಕಳ್ಳಿಮನಿ, ಹಿಟ್ಟಿನಹಳ್ಳಿ ಗ್ರಾಮ ಪಂಚಾಯತ ಅಭಿವೃಧ್ಧಿ ಅಧಿಕಾರಿಗ ರಾಜಶೇಖರ ಬಿರಾದಾರ, ತಾಲೂಕ ಪಂಚಾಯತಿಯ ತಾಂತ್ರಿಕ ಸಂಯೋಜಕರಾದ ಪರಶುರಾಮ ಶಹಾಪೂರ, ತಾಲೂಕ ಆಯ್.ಇ.ಸಿ ಸಂಯೋಜಕ ರಾಘವೇಂದ್ರ ಭಜಂತ್ರಿ ಹಾಗೂ ತಾಂತ್ರಿಕ ಸಹಾಯಕರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

