ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ಕುಮಾರ ಘೋಷ ಸೂಚನೆ
ವಿಜಯಪುರ: ಸರ್ಕಾರಿ ಜಾಗ ಒತ್ತುವರಿ ತಡೆಗೆ ಪೊಲೀಸ್ ಬೀಟ್ ಮಾದರಿಯಲ್ಲಿ ಲ್ಯಾಂಡ್ ಬೀಟ್ ವ್ಯವಸ್ಥೆ ಕೈಗೊಂಡು ಒತ್ತುವರಿ-ಅತಿಕ್ರಮಣ ತಡೆಗಟ್ಟಲು ಕ್ರಮ ವಹಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ ಕುಮಾರ ಘೋಷ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿರುವ ಸರ್ಕಾರಿ ಜಾಗವನ್ನು ಗುರುತಿಸಿಕೊಳ್ಳಬೇಕು. ಒತ್ತುವರಿಯಾಗಬಹುದಾದ ಜಾಗಗಳನ್ನು ಆದ್ಯತೆ ಮೇಲೆ ಪರಿಶೀಲಿಸಿ ಒತ್ತುವರಿಯಾಗದಂತೆ ನಿಗಾ ವಹಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಜಾಗದ ಕುರಿತು ಇರುವ ಅನುದಾನವನ್ನು ಬಳಕೆ ಮಾಡಿಕೊಂಡು ಸುತ್ತಲೂ ತಂತಿ ಬೇಲಿ ವ್ಯವಸ್ಥೆ ಸೇರಿದಂತೆ ಸರ್ಕಾರಿ ಜಾಗ ಇರುವ ಕುರಿತು ಫಲಕಗಳನ್ನು ಅಳವಡಿಸುವ ಮೂಲಕ ಒತ್ತುವರಿ ತಡೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಸರ್ಕಾರಿ ಜಾಗ ಸೇರಿದಂತೆ ಇತರೆ ಸರ್ವೇ ಕಾರ್ಯಕ್ಕಾಗಿ ಈಗಿರುವ ಸಾಧನ ಹಳೆಯದಾಗಿರುವುದರಿಂದ ಪ್ರಸ್ತುತ ಕಾಲೋಚಿತ ಡಿಜಿಪಿಎಸ್ ಯಂತ್ರ ಬಳಸಿ ಸರ್ವೇ ಕಾರ್ಯ ಕೈಗೊಳ್ಳುವುದರಿಂದ ಸಮಯಕ್ಕೆ ತಕ್ಕಂತೆ ಕಾರ್ಯದಲ್ಲಿ ವೇಗ ದೊರೆಯಲಿರುವುದರಿಂದ ಡಿಜಿಪಿಎಸ್ ಯಂತ್ರಗಳನ್ನು ಒದಗಿಸುವ ಕುರಿತಂತೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಜನವರಿ ಮಾಹೆಯಿಂದ ಈವರೆಗೆ ೪೩೧ ಮಿ.ಮೀ. ಮಳೆಯಾಗಿದ್ದು, ವಾಡಿಕೆ ಮಳೆಯ ಪ್ರಮಾಣಕ್ಕಿಂತ ಶೇ.೪೪ರಷ್ಟು ಹೆಚ್ಚಿನ ಮಳೆಯಾಗಿದೆ. ಇಲ್ಲಿಯವರೆಗೆ ೬೭೬೪೩೩ ಹೆಕ್ಟೇರ್ಗಳಲ್ಲಿ ಶೇ.೯೫.೧೦ ರಷ್ಟು ಬಿತ್ತನೆಯಾಗಿದೆ. ಬಿತ್ತನೆ ಬೀಜ ೧೪೬೨.೪೫ ಕ್ವಿಂಟಾಲ್ ಹಾಗೂ ೮೦೮೮೨ ಮೇ.ಟನ್ ರಸಗೊಬ್ಬರ ದಾಸ್ತಾನಿದ್ದು, ಸಧ್ಯಕೆ ಯಾವುದೇ ಕೊರತೆ ಇಲ್ಲ. ಆದ್ಯಾಗ್ಯೂ ಮುಂದಿನ ದಿನಗಳಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ದಾಸ್ತಾನು ಮಾಡಿಕೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲೆಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ, ನಗರಾಭಿವೃದ್ದಿ ಕೋಶ ಸೇರಿದಂತೆ ಇತರೆ ಕಚೇರಿಗಳಲ್ಲಿ ಮಾತ್ರ ಅನುಷ್ಠಾನಗೊಳಿಸಲಾಗಿದ್ದು, ಎಲ್ಲ ಕಚೇರಿಗಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಬೇಕು. ಜಿಲ್ಲಾ ಆಸ್ಪತ್ರೆಗಳಲ್ಲೂ ಇ-ಆಫೀಸ್ ಅನುಷ್ಠಾನಗೊಳಿಸಬೇಕು. ಈ ಕುರಿತು ಅಗತ್ಯ ತರಬೇತಿ ಒದಗಿಸಿ ಮುಂದಿನ ಸಭೆಯೊಳಗಾಗಿ ಎಲ್ಲ ಕಚೇರಿಗಳಲ್ಲಿ ಇ-ಆಫಿಸ್ ವ್ಯವಸ್ಥೆ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲು ಸೂಚನೆ ನೀಡಿದರು.
ಕಾಲ-ಕಾಲಕ್ಕೆ ಅಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡಬೇಕು. ವಸತಿ ನಿಲಯಗಳಲ್ಲಿನ ನ್ಯೂನ್ಯತೆಗಳನ್ನು ಕಂಡು ಹಿಡಿದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು. ವಸತಿ ನಿಲಯಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು-ನ್ಯೂನ್ಯತೆಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ೭ ವಸತಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ದ್ವಿಗುಣವಾಗಿರುವುದರಿಂದ ಶಿಕ್ಷಕರ ವಸತಿಗಳನ್ನು ಮಕ್ಕಳಿಗೆ ಒದಗಿಸಲಾಗಿದೆ. ಮಕ್ಕಳ ಸಂಖ್ಯೆ ಹೆಚ್ಚಾಗಿರುವುದರಿಂದ ಕಟ್ಟಡ ಅವಶ್ಯಕತೆ ಪರ್ಯಾಯ ವ್ಯವಸ್ಥೆ ಕುರಿತು ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್ ಕಾರ್ಡ ಪತ್ತೆ ಕಾರ್ಯ ಕೈಗೊಳ್ಳಬೇಕು. ಸರ್ಕಾರಿ ನೌಕರರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡಗಳನ್ನು ಹಿಂಪಡೆದು, ಎಪಿಎಲ್ ಕಾರ್ಡ ಮಾರ್ಪಾಡು ಮಾಡಿ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

“ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಎಲ್ಲ ಡ್ಯಾಂಗಳು ಭರ್ತಿಯಾಗಿವೆ. ಜಿಲ್ಲೆಯ ಡ್ಯಾಂಗಳಲ್ಲಿ ಶೇ.೯೩.೫ ರಷ್ಟು ನೀರು ಸಂಗ್ರಹವಿದೆ. ವಿಪತ್ತು ನಿರ್ವಹಣೆಗಾಗಿ ಗ್ರಾಮ ಪಂಚಾಯತ್ ಟಾಸ್ಕ್ ಪೋರ್ಸ್ ಸಮಿತಿ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪ್ರವಾಹ ಪರಿಸ್ಥಿತಿ ಹತೋಟಿಗೆ ಕ್ರಮ ವಹಿಸಲಾಗಿದೆ. ಪ್ರವಾಹ ಪರಿಸ್ಥಿತಿ ಕುರಿತು ಪ್ರತಿ ತಾಲೂಕಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮತ್ತು ನದಿ ಪಾತ್ರದ ಗ್ರಾಮ ಪಂಚಾಯತಿಗಳಿಗೆ ಒಬ್ಬರಂತೆ ತಾಲೂಕಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ೭ ಜನರ ಪ್ರಾಣ ಹಾನಿಗೆ ಸಂಬಂಧಿಸಿದಂತೆ ೯೫ ಜಾನುವಾರುಗಳಿಗೆ ಹಾಗೂ ಹಾನಿಯಾದ ೨೭೬ ಮನೆಗಳಿಗೆ ಪರಿಹಾರ ಒದಗಿಸಲಾಗಿದೆ.”
– ಟಿ.ಭೂಬಾಲನ್
ಜಿಲ್ಲಾಧಿಕಾರಿಗಳು, ವಿಜಯಪುರ

