ಬಸವನಬಾಗೇವಾಡಿ: ಭಗವಂತ ನಮಗೆ ನೀಡಿದ ಹುದ್ದೆಯಲ್ಲಿ ಯಾವುದೇ ಮುಖವಾಡ ಧರಿಸದೇ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಮೂಲಕ ಆ ಹುದ್ದೆಗೆ ನ್ಯಾಯ ಒದಗಿಸಿದರೆ ಅದರಲ್ಲಿ ನಾವು ಖಂಡಿತ ಯಶಸ್ಸು ಸಾಧಿಸಬಹುದು ಎಂದು ಧಾರವಾಡ ವಾಣಿಜ್ಯ ತೆರಿಗೆ ಇಲಾಖೆಯ ಉಪಆಯುಕ್ತ ಶಂಕರ ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ನಾವು ಯಾವುದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದರೂ ಆ ಹುದ್ದೆಗೆ ಮೋಸವಾಗದಂತೆ ಕಾರ್ಯ ಮಾಡುವುದು ಬಹು ಮುಖ್ಯ. ಶಿಕ್ಷಕ ಬಾಂಧವರ ಮೇಲೆ ಸಮಾಜದ ನಿರೀಕ್ಷೆ ಬಹಳಷ್ಟಿದೆ. ಶಿಕ್ಷಕರಲ್ಲಿರುವ ಅದ್ಭುತ ಶಕ್ತಿಯಿಂದಾಗಿ ಮಕ್ಕಳು ರಾಷ್ಟ್ರಪತಿ, ಪ್ರಧಾನಿ ಹುದ್ದೆ, ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಯಾವುದೇ ಹುದ್ದೆಗಳನ್ನು ಪಡೆದುಕೊಳ್ಳಬಹುದು. ಎಲ್ಲ ವೃತ್ತಿಗಿಂತಲೂ ಶಿಕ್ಷಕ ವೃತ್ತಿಯಲ್ಲಿ ಸಂತೃಪ್ತಿ ಸಿಗುತ್ತದೆ. ಶಿಕ್ಷಕರಿಗೆ ಸಮಾಜ ಸುಧಾರಣೆ ಮಾಡುವ ಶಕ್ತಿಯಿದೆ. ಶಿಕ್ಷಕರು ಕೇವಲ ಬಿಲ್-ಬೆಲ್ಗಾಗಿ ಕಾರ್ಯನಿರ್ವಹಿಸುವಂತಾಗಬಾರದು. ಮಕ್ಕಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತಾಗಬೇಕೆಂದರು.
ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ನಾನು 7 ವರ್ಷ ಕಾಲ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ್ದೇನೆ. ದೇಶದ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕ ಬಾಂಧವರ ಮೇಲಿದೆ. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಕ್ಕರೆ ಅವರು ಸತ್ಪ್ರಜೆಗಳಾಗಿ ಹೊರಹೊಮ್ಮುತ್ತಾರೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಅಭಿವೃದ್ಧಿಗೆ ಶಿಕ್ಷಕರು ಶ್ರಮಿಸಬೇಕೆಂದರು.
ಸಾನಿಧ್ಯ ವಹಿಸಿದ್ದ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬಿಇಓ ವಸಂತ ರಾಠೋಡ, ಕರವೇ ಮುಖಂಡ ಅಶೋಕ ಹಾರಿವಾಳ ಮಾತನಾಡಿದರು.
ವೇದಿಕೆಯಲ್ಲಿ ಇಟಗಿಯ ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ನ್ಯಾಯವಾದಿ ಬಿ.ಕೆ.ಕಲ್ಲೂರ, ಧುರೀಣರಾದ ಶಿವನಗೌಡ ಬಿರಾದಾರ, ಸಂಗಮೇಶ ಓಲೇಕಾರ, ನೀಲು ನಾಯಕ, ತಾಪಂ ಇಓ ಪ್ರಕಾಶ ದೇಸಾಯಿ, ಅಕ್ಷರ ದಾಸೋಹದ ಅಧಿಕಾರಿ ಎಸ್.ಎಚ್.ಬಿರಾದಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್.ಅವಟಿ,ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಪಿ.ನಾಗಾವಿ ಇತರರು ಇದ್ದರು.
ಕ್ಷೇತ್ರ ಸಮನ್ವಯಾಧಿಕಾರಿ ಸುನೀಲ ನಾಯಕ ಸ್ವಾಗತಿಸಿದರು. ಎಸ್.ಎಸ್.ಅಂಬಲಿ, ಭಾರತಿ ಪಾಟೀಲ, ಮಹೇಶ ಪೂಜಾರಿ ನಿರೂಪಿಸಿದರು. ಶರಣು ದಳವಾಯಿ ವಂದಿಸಿದರು.
ಹೃದಯಸ್ಪರ್ಶಿ ಸನ್ಮಾನ
ಕಾರ್ಯಕ್ರಮಕ್ಕೂ ಮುನ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಜ್ಯೋತಿಬಾ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಅಖಂಡ ತಾಲೂಕಿನಲ್ಲಿ ನಿವೃತ್ತಗೊಂಡ ಶಿಕ್ಷಕರನ್ನು, ಸಮಾರಂಭಕ್ಕೆ ಸಹಾಯ-ಸಹಕಾರ ನೀಡಿದ ಮಹನೀಯರನ್ನು ಸನ್ಮಾನಿಸಲಾಯಿತು.
ಉಪನ್ಯಾಸ ನೀಡಿದ ಕೆಎಎಸ್ ಅಧಿಕಾರಿ ಶಂಕರ ಬೆಳ್ಳುಬ್ಬಿ ಅವರು ತಮಗೆ ಕಲಿಸಿದ ಗುರುಗಳಿಗೆ ವೇದಿಕೆಯ ಮೇಲೆ ಸನ್ಮಾನಿಸಿ ಅವರಿಗೆ ನಮಸ್ಕರಿಸುವ ಮೂಲಕ ಗುರು ನಮನ ಸಲ್ಲಿಸಿದ್ದು ಹೃದಯಸ್ಪರ್ಶಿಯಾಗಿತ್ತು.

