ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್ಗೆ ೭೪೦೦ ರೂ. ಬೆಂಬಲ ಬೆಲೆಯಡಿ ಎಫ್ಎಕ್ಯೂ ಗುಣಮಟ್ಟದ ಉದ್ದಿನಕಾಳು ಉತ್ಪನ್ನವನ್ನು ಖರೀದಿಸಲು ನಿರ್ಧರಿಸಲಾಗಿದೆ.
ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಸೆ.೯ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ ೩೮೭ ಹೆಕ್ಟೇರ್ ಕ್ಷೇತ್ರದಲ್ಲಿ ಉದ್ದಿನಕಾಳು ಬಿತ್ತನೆಯಾಗಿದ್ದು, ಅಂದಾಜು ೩೮೭೦ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಉದ್ದಿನಕಾಳು ಪ್ರತಿ ಕ್ವಿಂಟಲ್ ರೂ. ೭೦೦೦ ರಿಂದ ೧೦೯೨೦ ವರೆಗಿನ ದರದಲ್ಲಿ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಉದ್ದಿನಕಾಳು ಪ್ರತಿ ಕ್ವಿಂಟಲ್ ೭೪೦೦ ರೂ.ಗೆ ಖರೀದಿಸಲು ತೀರ್ಮಾನಿಸಿ, ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು, ಟಿಎಪಿಸಿಎಂಎಸ್ ಸಂಸ್ಥೆಗಳನ್ನು ಖರೀದಿ ಕೇಂದ್ರಗಳೆಂದು ಪರಿಗಣಿಸಿ ರೈತರ ನೊಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜಿಲ್ಲೆಯ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಇಂಡಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೨ ಕ್ವಿಂಟಾಲ್ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ ೧೦ ಕ್ವಿಂಟಾಲ್ ಗುಣಮಟ್ಟದ ಉದ್ದಿನಕಾಳು ಖರೀದಿಸಲು ತೀರ್ಮಾನಿಸಿ, ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಎಪಿಸಂಸಿ ಯಾರ್ಡ ವಿಜಯಪುರ ಮೊ: ೯೪೪೯೮೬೪೪೫೨ ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.
ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ರೈತರಿಗೆ ನಿಗದಿತ ಅವಧಿಯೊಳಗೆ ಖರೀದಿ ಪ್ರಮಾಣದ ಮೌಲ್ಯವನ್ನು ಡಿಬಿಟಿ ಮೂಲಕ ಜಮೆ ಆಗುವಂತೆ ಪಾವತಿ ಮಾಡಬೇಕು. ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಖರೀದಿ ಕೇಂದ್ರಗಳಲ್ಲಿ ವರ್ತಕರು ತರುವ ಸೂರ್ಯಕಾಂತಿ ಖರೀದಿಸದಂತೆ ಹಾಗೂ ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
