ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಗ್ರಾಮೀಣ ಭಾಗದ ಜನರ ಆರೋಗ್ಯವನ್ನು ವೃದ್ಧಿಸುವ ದೃಷ್ಠಿಯಿಂದ ಗ್ರಾಮ ಪಂಚಾಯತಿಗಳ ಜೊತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿ ಎಲ್ಲ ಇಲಾಖೆಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಈ ರೀತಿ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದ್ದಲ್ಲಿ ನಾವು ಎಲ್ಲ ವಿಷಯದಲ್ಲಿಯೂ ಪ್ರಗತಿ ಸಾಧಿಸಬಹುದು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಸೆ.೧೦ರಂದು ಹಮ್ಮಿಕೊಂಡ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ರೀತಿಯಾಗಿ ಕಾರ್ಯ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಹಾಗೂ ಗ್ರಾಮೀಣರಲ್ಲಿರುವ ರೋಗ ಭಯವನ್ನು ಹೊಗಲಾಡಿಸಬಹುದು ಎಂದರು. ಜೊತೆ ಜೊತೆಗೆ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಶಾಲೆಯಲ್ಲಿ, ಅಂಗನವಾಡಿ ಕೇಂದ್ರದಲ್ಲಿ ಇತರೆ ಸಮುದಾಯ ಜನ ಸೇರುವ ಸ್ಥಳದಲ್ಲಿ ಆರೋಗ್ಯ ಶಿಬಿರ, ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಆರೋಗ್ಯದ ಕುರಿತು ಪ್ರಚಾರ ಮಾಡಬೇಕು ಎಂದರು.
ಆರೋಗ್ಯದ ಜೊತೆಜೊತೆಗೆ ಬಾಲ್ಯವಿವಾಹ, ಸಾಂಕ್ರಾಮಿಕ-ಅಸಾಂಕ್ರಾಮಿಕ ರೋಗಗಳ ಕುರಿತು, ಅಪೌಷ್ಠಿಕತೆ ಕುರಿತು, ಮಕ್ಕಳ & ಮಹಿಳೆಯರ ಕಳ್ಳ ಸಾಕಾಣಿಕೆ, ಶಾಲೆಯಿಂದ ಹೊರಗುಳಿದ ಮಕ್ಕಳ ವಿಷಯ ಸೇರಿ ವಿವಿಧ ವಿಷಯದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು & ಸಿಬ್ಬಂದಿ ಅತ್ಯಂತ ಸಹಕಾರದಿಂದ ಕರ್ತವ್ಯ ನಿರ್ವಹಿಸಲು ಸಲಹೆ ನೀಡಿದರು.
ಹೊನವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಧಿಕಾರಿ ಸಿ.ಎ.ಜೋಷಿ ಅವರು ತರಬೇತಿ ನೀಡಿದರು.
ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನೀಲ ಹಳ್ಳಿ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಶೋಭಕ್ಕ ಶೀಳಿನ, ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾಗೂ ತಾಲೂಕು ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

