ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಹಾಗೂ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಯುತ ಸಮಾಜ ನಿರ್ಮಾಣವಾಗುತ್ತದೆ ಎಂದು ಸ್ಥಳೀಯ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪುರಸಭೆ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಪುರಸಭೆ ಪೌರಕಾರ್ಮಿಕರು ಪ್ರತಿ ಮನೆಗಳ ಕಸ ಸಂಗ್ರಹಿಸುವುದರೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಸಂಗ್ರಹಿಸುವ ಮೂಲಕ ಪಟ್ಟಣದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ. ಅವರೊಂದಿಗೆ ಜನರು ಸಹಕರಿಸಿ ಕೈಜೋಡಿಸಿದಾಗ ಸುಂದರ ಪಟ್ಟಣವನ್ನಾಗಿಸಬಹುದು. ನಮ್ಮ ಸ್ವಭಾವ, ಸಂಸ್ಕಾರ ಸ್ವಚ್ಛವಾಗಿದ್ದಾಗ ಸ್ವಚ್ಛತೆಯ ಮಹತ್ವ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪುರಸಭೆ ಸದಸ್ಯೆ ಜಗದೇವಿ ಗುಂಡಳ್ಳಿ , ಅಶೋಕ ಹಾರಿವಾಳ ಮಾತನಾಡಿ, ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಮಾತನಾಡಿ, ಸ್ವಚ್ಛತೆಯ ಮಹತ್ವ ತಿಳಿಸಿಕೊಡುವುದಕ್ಕಾಗಿ ಮಾನವ ಸರಪಳಿ, ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ, ತ್ಯಾಜ್ಯ ವಸ್ತುಗಳಿಂದ ತಯಾರಿಸಿದ ವಸ್ತುಗಳ ಪ್ರದರ್ಶನ, ಬೀದಿ ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಪುರಸಭೆ ಸದಸ್ಯ ಪ್ರವೀಣ ಪೂಜಾರಿ, ಮುಖಂಡರಾದ ಸಂಜೀವ ಕಲ್ಯಾಣಿ, ಶರಣಪ್ಪ ಬೆಲ್ಲದ, ಹಿರಿಯ ಆರೋಗ್ಯ ನಿರೀಕ್ಷಕ ವಿಜಯಕುಮಾರ ವಂದಾಲ, ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಕಚೇರಿ ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಸತ್ಯಪ್ಪ ಪೂಜಾರಿ, ರಾಜು ರಾಠೋಡ, ಲಕ್ಷ್ಮೀ ರಾಂಪೂರ, ನೀಲಾ ಬಳವಾಟ, ರಾವುತಪ್ಪ ಮ್ಯಾಗೇರಿ ಇದ್ದರು.
ನಂತರ
ಕಾರ್ಯಕ್ರಮಕ್ಕೂ ಮುನ್ನ ಬಸವಜನ್ಮಸ್ಮಾರಕ ಮುಂಭಾಗದಲ್ಲಿ ಜಾಗೃತಿ ಅಭಿಯಾನಕ್ಕೆ ಶ್ರೀಗಳು ಚಾಲನೆ ನೀಡಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.

