’ಸ್ವಚ್ಚತಾ ಹೀ ಸೇವಾ’ ಅಭಿಯಾನಕ್ಕೆ ಚಾಲನೆ ನೀಡಿದ ಜಿಪಂ ಸಿಇಒ ರಿಷಿ ಆನಂದ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸ್ವಚ್ಚತಾ ಹಿ ಸೇವಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಚಾಲನೆ ನೀಡಿದರು.
ಸ್ವಚ್ಚ ಭಾರತ ಮಿಷನ್ ಯೋಜನೆಯಡಿ ಜಿಲ್ಲಾ ಪಂಚಾಯತನ ಎಲ್ಲಾ ಕೊಠಡಿ, ವಾಹನ ನಿಲುಗಡೆ ಸ್ಥಳ, ಸಾರ್ವಜನಿಕರ ಭೇಟಿ ಸ್ಥಳ ಮತ್ತು ಉದ್ಯಾನ ಸ್ಥಳವು ಸೇರಿದಂತೆ ಒಳಾಂಗಣ ಮತ್ತು ಹೊರ ಆವರಣಗಳನ್ನು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಕೇಂದ್ರ ಜಲಶಕ್ತಿ ಮಂತ್ರಾಲಯ ಸಹಯೋಗದೊಂದಿಗೆ ಇಂದು ಭಾರತದಾದ್ಯಂತ ಹಮ್ಮಿಕೊಂಡಿರುವ ಸ್ವಭಾವ ಸ್ವಚ್ಚತಾ, ಸಂಸ್ಕಾರ ಸ್ವಚ್ಚತಾ ಎಂಬ ಘೋಷವಾಕ್ಯದೊಂದಿಗೆ ಸೆಪ್ಟೆಂಬರ ೧೭ ರಿಂದ ಅಕ್ಟೋಬರ್ ೦೨ ರವರೆಗೆ ಎರಡು ವಾರಗಳ ಕಾಲ ಜಿಲ್ಲಾ ಹಾಗೂ ತಾಲೂಕು, ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿ ದಿನವೂ ಸ್ವಚ್ಛತೆ ಎಂಬುದು ನಮ್ಮೆಲ್ಲರ ಆದ್ಯತೆಯಾಗಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿಯೂ ಸ್ಚಚ್ಚತಾ ಕಾರ್ಯ ಕೈಗೊಳ್ಳುವ ಮೂಲಕ ಕಚೇರಿಯ ಆವರಣ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು. ಸುತ್ತಲಿನ ಪರಿಸರದ ಸ್ವಚ್ಚತೆ ಕಾಳಜಿ ವಹಿಸಬೇಕು. ಪರಿಸರ ಸ್ವಚ್ಛವಾಗಿದ್ದರೆ, ಆರೋಗ್ಯವಂತರಾಗಿ ಇರಲು ಸಾಧ್ಯ. ಆದ್ದರಿಂದ ಉತ್ತಮ ಆರೋಗ್ಯಕ್ಕಾಗಿ ಸ್ವಚ್ಚತೆ ನಿರ್ವಹಣೆಗೆ ಮಾಡಬೇಕು. ಒಂದೆ ಕಡೆ ನೀರು ನಿಲ್ಲದಂತೆ ಗಮನ ಹರಿಸಬೇಕು. ಕರ್ತವ್ಯ ಸ್ಥಳದಲ್ಲಿಯೂ ಸಹ ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಹೇಳಿದರು. ನಂತರ ಸ್ವಚ್ಚತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಹೊನಗನಹಳ್ಳಿ ಗ್ರಾಮದ ಗ್ರಂಥಾಲಯದ ಅರಿವು ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ವಾಚಕರಿಗೆ ಅನುಕೂಲವಾಗುವ ಪುಸ್ತಕಗಳ ಪಟ್ಟಿಮಾಡಿ, ಕಂಪ್ಯೂಟರ್ ಹಾಗೂ ಇತರ ಪರಿಕರಗಳನ್ನು ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಖರೀದಿಸಲು ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿ. ಎಸ್. ಹಿರೇಮಠ ಅವರಿಗೆ ಸೂಚಿಸಿದರು. ಕೂಸಿನ ಮನೆಗೆ ಭೇಟಿ ನೀಡಿ, ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟದಿಂದ ಇರಬೇಕು. ಸರಿಯಾದ ಸಮಯಕ್ಕೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕೆಂದು ಆರೈಕೆದಾರರಿಗೆ ಸೂಚಿಸಿದರು. ಹೊನಗನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಸ್ಪಂದಿಸಬೇಕು. ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳನ್ನು ವ್ಯವಸ್ಥೆ, ಕೇಂದ್ರದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ,ಉಪ ಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಬಬಲೇಶ್ವರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ವಿ. ಎಸ್. ಹಿರೇಮಠ, ಗ್ರಾಮ ಪಂಚಾಯತಿ ಅಧ್ಯಕ್ಷ ನಚಿಕೇತನ ಬಿದರಿ, ಉಪಾಧ್ಯಕ್ಷ ರಮೇಶ್ ಕಾಂಬಳೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಯಶ್ರೀ ಪವಾರ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಹೊನಗನಹಳ್ಳಿಯಲ್ಲೂ ಸ್ವಚ್ಛತಾ ಹೀ ಸೇವಾ ಅಭಿಯಾನ
ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮ ಪಂಚಾಯತಿಯ ಸರ್ಕಾರಿ ಪ್ರೌಢಶಾಲೆ ಅವರಣದಲ್ಲಿಯೂ ಸಹ ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳು ಸ್ವಚ್ಛತೆಗೆ ಮತ್ತು ಆರೋಗ್ಯ ಕಡೆ ಹೆಚ್ಚಿನ ಆದ್ಯತೆ ಕೊಡಬೇಕು. ನೆರೆಹೊರೆ ವಾತಾವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶೌಚಾಲಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಶೌಚಾಲಯವಿಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ, ಸಹಾಯಧನದಿಂದ ಶೌಚಾಲಯ ಕಟ್ಟಿಸಿ ತಮ್ಮ ಮನೆಯ ಸುತ್ತಲಿನ ಪರಿಸರ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸಿಇಒ ರಿಷಿ ಆನಂದ ಅವರು ಹೇಳಿದರು.
ವಿದ್ಯಾರ್ಥಿಗಳು ಓದಿಗೆ ಪೂರಕವಾಗಿ ಆಸಕ್ತಿ ಕ್ಷೇತ್ರದ ಕುರಿತು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಶಿಕ್ಷಕರ ಸಹಕಾರದಿಂದ ಗುರಿ ಹಾಗೂ ನಿಖರ ಯೋಜನೆಯೊಂದಿಗೆ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ. ವಿದ್ಯಾಭ್ಯಾಸದ ಜೊತೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿಯೂ ಭಾಗವಹಿಸಬೇಕು. ಸ್ವಚ್ಛತಾ ಹೀ ಸೇವಾ ಅಭಿಯಾನದ ಇಂಗ್ಲಿಷ್ ಅಕ್ಷರದಲ್ಲಿ ಮೂಡಿದ ಸಾಂದರ್ಭಿಕ ಸಂಕೇತ ಎಲ್ಲರ ಗಮನ ಸೆಳೆಯಿತು.
ಬಳಿಕ ಸಿಇಓ ಅವರು ಸ್ವತಃ ಪ್ರೌಢಶಾಲೆ ಆವರಣದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ ಅಭಿಯಾನಕ್ಕೆ ಚಾಲನೆ ನೀಡಿದರು.

