ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಸ್ವಚ್ಚತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.
ಅವರು ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಹಾಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವುದರ ಮೂಲಕ ಅವರ ಬದುಕು ಮತ್ತು ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆ ಆಯುಕ್ತ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮನೋವೈದ್ಯರಾದ ಡಾ.ಮಂಜುನಾಥ ಮಸಳಿ ಉಪನ್ಯಾಸ ನೀಡಿದರು. ಪೌರಕಾರ್ಮಿಕರಿಗಾಗಿ ಆಯೋಜಿಸಲಾದ ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಮಹೇಜಬಿನ್ ಹೊರ್ತಿ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ ಸೇರಿದಂತೆ ಮಹಾನಗರಪಾಲಿಕೆ ಸದಸ್ಯರು, ಪೌರಕಾರ್ಮಿಕರು, ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

“ಪೌರಕಾರ್ಮಿಕರು ತಮ್ಮ ಕರ್ತವ್ಯದ ಜೊತೆಗೆ ಸುರಕ್ಷಾ ಪರಿಕರಗಳನ್ನು ಉಪಯೋಗಿಸಿ ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು.”
– ದಿನೇಶ ಹಳ್ಳಿ
ಉಪಮಹಾಪೌರರು, ಮಹಾನಗರ ಪಾಲಿಕೆ

“ಪೌರ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳಿದ್ದು, ಈಗಾಗಲೇ ಪಾಲಿಕೆ ವತಿಯಿಂದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಟ್ಯಾಬ್ಗಳನ್ನ್ನು ವಿತರಿಸಲಾಗಿದೆ. ಆರೋಗ್ಯ ದೃಷ್ಟಿಯಿಂದ ಹಾಗೂ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಈಗಾಗಲೇ ಮಾಹಿತಿ ಕಾರ್ಯಗಾರ ಹಮ್ಮಿಕೊಂಡಿದ್ದು, ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು.”
– ವಿಜಯಕುಮಾರ ಮೆಕ್ಕಳಕಿ
ಆಯುಕ್ತರು, ಮಹಾನಗರ ಪಾಲಿಕೆ

