ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜರಗುವ ಜನನ ಮರಣ ಘಟನೆಗಳನ್ನು ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ ನೋಂದಣಿ ಕಾರ್ಯ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನನ ಮರಣ ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿಕಾರಿಗಳು ನಮೂನೆ ಒಂದು ಹಾಗೂ ನಮೂನೆ ೨ರ ಮೂಲ ನಮೂನೆಗಳನ್ನು ಬಳಸಬೇಕು. ಹಾಗೆಯೇ ಜನನ ಮರಣ ನಮೂನೆ ಭರ್ತಿ ಮಾಡುವಾಗ ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ ಪರೀಶೀಲಿಸಬೇಕು ಎಂದು ಹೇಳಿದರು.
ಗ್ರಾಮಾಂತರ ಪ್ರದೇಶದ ಎಲ್ಲಾ ನೋಂದಣಿ, ಉಪನೋಂದಣಾಧಿಕಾರಿಗಳಿಂದ ಪ್ರತಿ ತಿಂಗಳು ೫ನೇ ತಾರೀಕಿನೊಳಗಾಗಿ ಸಂಬಂಧಿಸಿದ ತಹಶೀಲ್ದಾರರು ಮಾಹಿತಿಯನ್ನು ಸ್ವೀಕರಿಸಿ, ದಿನಾಂಕ ೧೦ರೊಳಗಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಮಾಹಿತಿಯನ್ನು ಸಲ್ಲಿಸಬೇಕು. ಎಲ್ಲಾ ತಹಶೀಲ್ದಾರರು ಪ್ರತಿ ತಿಂಗಳು ತಾಲೂಕು ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯನ್ನು ನಡೆಸಿ ವರದಿಯನ್ನು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದರು.
ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳನ್ನು ಜನನ ಮರಣ ಉಪನೋಂದಣಾಧಿಕಾರಿಗಳಾಗಿ ಸರ್ಕಾರ ನೇಮಿಸಿದೆ. ಜನನ ಮರಣ ನೋಂದಣಿ ಕಾರ್ಯವನ್ನು ವೈದ್ಯಕೀಯ ಸಂಸ್ಥೆಗಳಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೆ.ಪಿ.ಪವನಕುಮಾರ, ಸಹಾಯಕ ನಿರ್ದೇಶಕರು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅಲ್ತಾಫ್ ಮಣಿಹಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ವಾಣ ಸೇರಿದಂತೆ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿಯ ಅಧಿಕಾರಿಗಳು, ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

