ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಳೆನೀರು ನಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಕಸ, ತಾಜ್ಯಗಳನ್ನು ತೆಗೆದು ರಾಜಕಾಲುವೆಗಳನ್ನು ಸ್ವಚ್ಚವಾಗಿಡಬೇಕು. ಒತ್ತುವರಿಯಾಗಿರುವ ರಾಜಕಾಲುವೆ, ಅತಿಕ್ರಮಣವನ್ನು ೧೫ ದಿನಗಳ ಕಾಲಮಿತಿಯಲ್ಲಿ ತೆರವುಗೊಳಿಸಲು ಕ್ರಮವಹಿಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಆದ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು.
ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರನ್ನೊಳಗೊಂಡ ಕಾರ್ಯಪಡೆ ರಚಿಸಿಕೊಂಡು ಆಗಾಗ ಸಭೆ ನಡೆಸಬೇಕು ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯು ರಸ್ತೆ ನಿರ್ಮಾಣ ಸಂದರ್ಭದಲ್ಲಿ ಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು.
ಮಳೆಯಿಂದ ಹಾನಿಯಾದ ರಸ್ತೆ, ವಿದ್ಯುತ್ ಕಂಬ ಮಾಹಿತಿ ಸಂಗ್ರಹಿಸುವಂತೆಯೂ, ಮಳೆ ಸಂದರ್ಭದಲ್ಲಿ ಯಾವುದೇ ಅಪಾಯಗಳು ಉಂಟಾಗದಂತೆ ವಿದ್ಯುತ್ ಕಡಿತಗೊಳಿಸಬೇಕು ಎಂದು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ, ಸಕಾಲಕ್ಕೆ ಹಾಜರಾಗುವ ಬಗ್ಗೆ ಜಿಲ್ಲಾ ಪಂಚಾಯತಿಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಕಾಲಕಾಲಕ್ಕೆ ಅನೀರಿಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮಳೆಯಿಂದ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದ ಅವರು, ಎರಡು ವಾರಗಳಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುವುದು. ಯಾವುದೇ ನೆಪ ಹೇಳದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಡೋಣಿ ನದಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹವನ್ನು ತಡೆಗಟ್ಟಲು ನದಿಯ ಇಕ್ಕೆಲಗಳಲ್ಲಿ ಬೆಳೆದಿರುವ ಜಾಲಿಕಂಟಿಗಳನ್ನು ಸ್ವಚ್ಛಗೊಳಿಸುವ ಕಾಮಗಾರಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಮೇಯರ್ ಮಹೇಜನಬಿ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಪ್, ಉಪ ಮೇಯರ್ ದಿನೇಶ ಹಳ್ಳಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಋಷಿಕೇಶ ಸೋನಾವಣೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆ-ಬೆಳೆಹಾನಿ ಸಮೀಕ್ಷೆಗೆ ಸೂಚನೆ
ಜಿಲ್ಲೆಯಲ್ಲಿ ದಾಖಲೆಯ ಮಳೆಯಿಂದಾಗಿರುವ ಹಾನಿಯ ಕುರಿತು ತುರ್ತಾಗಿ ಸಮೀಕ್ಷೆ ಕೈಗೊಂಡು ಮನೆ-ಬೆಳೆಹಾನಿ ಸಮೀಕ್ಷೆ ಕೈಗೊಳ್ಳಬೇಕು. ನಿಖರ ಮಾಹಿತಿ ಸಿದ್ಧಪಡಿಸುವಂತೆಯೂ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿರುವ ಹಾನಿಯ ಬಗ್ಗೆ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.

