ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಅನುದಾನವನ್ನು ಲ್ಯಾಪ್ಸ್ ಆಗದಂತೆ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ೨೦೨೪-೨೫ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಆಗಸ್ಟ್-೨೦೨೪ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆಯಾಗಿದ್ದು ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸುವಂತೆ ಸೂಚಿಸಿದರು. ಬಾಕಿ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪೌರ ಕಾರ್ಮಿಕರಿಗೆ ನೇಮಕಾತಿ ಸಂದರ್ಭದಲ್ಲಿ ಬೇಕಾದ ಪ್ರಮಾಣ ಪತ್ರ ನೀಡಿಕೆ ವಿಳಂಬ ಆಗುತ್ತಿದ್ದು, ಆದಷ್ಟು ಶೀಘ್ರವಾಗಿ ಪರಿಶೀಲನೆ ಮಾಡಿ ಪೌರ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಹೊರಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ಇ.ಪಿ.ಎಫ್ ಇ.ಎಸ್.ಐ ಕಟಾವು ಕುರಿತು ನಿಯತಮಿತವಾಗಿ ಪರಿಶೀಲಿಸಬೇಕು, ಪ್ರತಿ ಮೂರು ತಿಂಗಳಿಗೊಮ್ಮೆ ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯ್ನು ತಜ್ಞ ವೈದ್ಯರಿಂದ ನಡೆಸಬೇಕು ಹಾಗೂ ಎಲ್ಲ ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಸಮರ್ಪಕವಾಗಿ ಒದಗಿಸಬೇಕು ಬಳಸುವಂತೆ ನೋಡಿಕೊಳ್ಳಬೇಕು. ಪೌರ ಕಾರ್ಮಿಕರಿಗೆ ವಿಶ್ರಾಂತಿ ಗ್ರಹಗಳನ್ನು ಸ್ಥಾಪಿಸಿ ಅಲ್ಲಿ ಅವರಿಗೆ ಎಲ್ಲ ಮೂಲಭೂತ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
ಹೊರಗುತ್ತಿಗೆ ಆಧಾರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಆರೋಗ್ಯ ವಿಮಾ ಯೋಜನೆ ಸೌಲಭ್ಯ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ನಗರಾಭಿವೃದ್ಧಿ ಕೋಸದ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌದಾಗರ, ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

