ಅಕ್ಕಮಹಾದೇವಿ ಮಹಿಳಾ ವಿವಿ ಎನ್ನೆಸ್ಸೆಸ್ ಕೋಶ & ಗಾಂಧಿ ಅಧ್ಯಯನ ಕೇಂದ್ರದಿಂದ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾತ್ಮಾಗಾಂಧೀಜಿ ಅವರು ಪ್ರತಿಪಾದಿಸಿದ ಅಭಿವೃದ್ಧಿ ಮಾದರಿಗಳನ್ನು ದೇಶದಲ್ಲಿ ಅನುಷ್ಟಾನಗೊಳಿಸಿದಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ವಿಕಸಿತ ಭಾರತದ ಗುರಿಗಳನ್ನು ಸುಲಭವಾಗಿ ಸಾಧಿಸಲು ಸಾಧ್ಯವಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಪ್ರತಿಪಾದಿಸಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಾಂಧೀಜಿಯವರು ಪ್ರತಿಪಾದಿಸಿದ ಗ್ರಾಮಸ್ವರಾಜ್ಯ, ಗುಡಿ ಕೈಗಾರಿಕೆಗಳ ಅಭಿವೃದ್ಧಿ ಹೀಗೆ ಹಲವು ಬಗೆಯ ಅಭಿವೃದ್ಧಿ ಮಾದರಿಗಳ ಮೂಲಕ ನಾವು ದೇಶದ ಪ್ರಗತಿಗೆ ಮುಂದಾಗಬೇಕಿದೆ ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಪ್ರಾಧ್ಯಾಪಕ ಬಿ.ಜಿ.ಪತ್ತಾರ ಅವರು, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಮೌಲ್ಯಗಳು ಇವತ್ತಿಗೂ ಪ್ರಸ್ತುತವಾಗಿದ್ದು ಇವುಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬದುಕು ನಮಗೆಲ್ಲರಿಗೂ ಪ್ರೇರಣಾದಾಯಕವಾಗಿದ್ದು ಅವರು ಪ್ರತಿಪಾದಿಸಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಇದೇ ಸಂದರ್ಭದಲ್ಲಿ ಅವರು ಗಾಂಧೀಜಿ ಮತ್ತು ಸ್ವಾತಂತ್ರ್ಯ ಹೋರಾಟ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಅಲ್ಲದೇ ಗಾಂಧೀಜಿ ಕುರಿತ ಕವನ ವಾಚಿಸಿದರು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಅಮರನಾಥ ಪ್ರಜಾಪತಿ, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರಿಂದ ಭಜನ ನಡೆಯಿತು. ಎನ್.ಎಸ್.ಎಸ್. ಕೋಶದ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಅಶೋಕ ಸುರಪುರ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಲಾವತಿ ಕಾಂಬಳೆ ಅತಿಥಿಗಳನ್ನು ಪರಿಚಯಿಸಿ, ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ಅಶ್ವಿನಿ ಕೆ.ಎನ್ ಕಾರ್ಯಕ್ರಮ ನಿರೂಪಿಸಿದರು.

