ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ, ಕವಿ ಪ್ರಕಾಶನ ಮತ್ತು ಚಿತ್ತಾರ ಕಲಾ ಬಳಗ ಆಶ್ರಯದಲ್ಲಿ ಇದೇ ಭಾನುವಾರ, ಅಕ್ಟೋಬರ್ 6 ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ “ಜನಕಲಾ ಸಾಂಸ್ಕೃತಿಕ ಮೇಳ”ಕ್ಕೆ ಪರಿಶಿಷ್ಡ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಸಮನ್ವಯ ಸಮಿತಿಯು ಬೆಂಬಲ ವ್ಯಕ್ತಪಡಿಸಿದೆ ಎಂದು ಸಮಿತಿಯ ಅಧ್ಯಕ್ಷರಾದ ಬಿ.ಎಚ್. ನಾಡಗಿರಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಜಯಪುರ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಹೋರಾಟದ ಹಾಡುಗಳು ರಿಂಗಣಿಸಲಿದ್ದು, ಜೊತೆಗೆ ಕೋಮುವಾದಿ ಹಂತಕರ ಗುಂಡಿಗೆ ಬಲಿಯಾದ ಡಾ. ಎಂ.ಎಂ. ಕಲಬುರ್ಗಿಯವರ ಜೀವನಾಧಾರಿತ ನಾಟಕ ಪ್ರದರ್ಶನಗೊಳ್ಳಲಿದೆ.
ದಲಿತ ಚಳುವಳಿಗೆ 50 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ಈ ಜನಕಲಾ ಮೇಳವನ್ನು ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಸಮನ್ವಯ ಸಮಿತಿಯ ಜಿಲ್ಲಾ ಮತ್ತು ತಾಲೂಕಾ ಪದಾಧಿಕಾರಿಗಳು, ಎಲ್ಲ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾವಹಿಸಿ ಯಶಸ್ವಿಗೊಳಿಸಬೇಕು ಎಂದು ಬಿ.ಎಚ್. ನಾಡಗಿರಿ ಅವರು ಕೋರಿದ್ದಾರೆ

