ವೃಕ್ಷಥಾನ್ ಹೆರಿಟೇಜ್ ರನ್-೨೦೨೪ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕ, ಆರೋಗ್ಯ ಮತ್ತು ಪ್ರವಾಸೋದ್ಯಕ್ಕೆ ಉತ್ತೇಜನ ನೀಡುವ ದಿಶೆಯಿಂದ ಡಿಸೆಂಬರ್ ೨೨ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-೨೦೨೪ರ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಇಲಾಖಾ ನೌಕರರು ನೋಂದಣಿ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ -೨೦೨೪ರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಸಹಕಾರದೊಂದಿಗೆ, ಕೋಟಿ ವೃಕ್ಷ ಅಭಿಯಾನ, ಸೊಸೈಟಿ ಪಾರ್ ಪ್ರೋಟೆಕ್ಷನ್ ಆಫ್ ಪ್ಲಾಂಟ್ ಆ್ಯಂಡ್ ಅನಿಮಲ್ಸ, ನಗರಾಭಿವೃದ್ಧಿ ಪ್ರಾಧಿಕಾರ ವಿಜಯಪುರ, ಬಿಎಲ್ಡಿಇ ಅಸೋಷಿಯೇಶನ್, ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ಸಿಆರ್ಡಿಎಸ್ ಪೌಂಡೇಷನ್, ಮಹಾನಗರ ಪಾಲಿಕೆ ವಿಜಯಪುರ ಹಾಗೂ ಇತರರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ನೋಂದಣಿ ಮಾಡುವ ಗುರಿ ಹೊಂದಬೇಕು ಎಂದು ಹೇಳಿದರು.
೨೧ ಕಿಮೀ, ೧೦ಕಿಮೀ, ೫ಕಿಮೀ ಮ್ಯಾರಾಥಾನ್ ಓಟ ನಡೆಯಲಿದ್ದು, ಕ್ರಮವಾಗಿ ೧,೨೦೦ರೂ, ೧,೦೦೦ರೂ ಹಾಗೂ ೬೦೦ ರೂಗಳು ನೋಂದಣಿ ಶುಲ್ಕವಾಗಿದ್ದು, ಪ್ರವಾಸೋಧ್ಯಮ ಹಾಗೂ ಪರಿಸರ ಜಾಗೃತಿಯ ಕುರಿತಾದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದ ಯಶಸ್ಸಿಗೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳು ತಮ್ಮ ಅಧೀನದಲ್ಲಿರುವ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಮಹತ್ವವನ್ನು ಪ್ರಚುರಪಡಿಸುವುದರ ಮೂಲಕ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಗೆ ಸಹಕರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅರಣ್ಯ ಇಲಾಖೆಯ ಶಿವಶರಣಯ್ಯ ಕೆ., ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಬಜಂತ್ರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾ. ಎಲ್, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಹಾಗೂ ವೃಕ್ಷಥಾನ್ ಹೆರಿಟೇಜ್ ರನ್ ಸಂಚಾಲಕ ಮುರುಗೇಶ ಪಟ್ಟಣಶೆಟ್ಟಿ ಸೇರಿದಂತೆ, ಜಿಲ್ಲೆಯ ವಿವಿಧ ಕಾಲೇಜಿನ ಪ್ರಾಂಶುಪಾಲರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

"ವಿಜಯಪುರದಲ್ಲಿ ಅರಣ್ಯ ಪ್ರದೇಶ ಕಡಿಮೆಯಿರುವುದು ಮನಗಂಡ ಜಿಲ್ಲಾ ಉಸ್ತಾವರಿ ಸಚಿವ ಡಾ. ಎಂ.ಬಿ.ಪಾಟೀಲರು ಕೋಟಿ ವೃಕ್ಷ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಅರಣ್ಯಿಕರಣಕ್ಕೆ ಒತ್ತು ನೀಡಿದ ಫಲವಾಗಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉದ್ಯಾನವನ, ಹಸಿರೀಕರಣ ಅರಣ್ಯ ಪ್ರದೇಶಗಳು ವಿಸ್ತಾರಗೊಳ್ಳುತ್ತಿದೆ. ಮಮದಾಪೂರದ ಮೀಸಲು ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮಿಜಿಯವರ ಹೆಸರು ನಾಮಕರಣ ಮಾಡಿದ್ದು ಸಂತಸ ತಂದಿದೆ. ಜಿಲ್ಲಾಡಳಿತದ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಜನರಲ್ಲಿಯೂ ಕೂಡಾ ಇವಾಗ ಸಸಿಗಳನ್ನು ನೆಡುವ ಮೂಲಕ ಅರಣ್ಯಕರಣಕ್ಕೆ ಒತ್ತು ನೀಡುವ ಮನೋಭಾವ ಬಂದಿದೆ. ಈ ಮೂಲಕ ವೃಕ್ಷಥಾನ್ ಕಾರ್ಯಕ್ರಮದ ಮೂಲ ಉದ್ದೇಶ ಸಾಕಾರಗೊಳ್ಳುತ್ತಿದೆ."– ಡಾ.ಮಹಾಂತೇಶ ಬಿರಾದಾರ
ಜಿಲ್ಲಾ ಉಸ್ತುವಾರಿ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ
“ವೃಕ್ಷೋತ್ಥಾನ್ ಹೆರಿಟೇಜ್ ರನ್ ಗೆ ಎಲ್ಲ ಇಲಾಖೆಗಳೂ ಸಂಪೂರ್ಣವಾಗಿ ಕೈಜೊಡಿಸಬೇಕು. ಈ ನಿಟ್ಟಿನಲ್ಲಿ ನಾನು ಸಂಪೂರ್ಣ ಸಹಕಾರ ನೀಡುವೆ.”
– ರಿಷಿ ಆನಂದ
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ

