ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಗುರುಧರ್ಮ, ದೇಶಪ್ರೇಮ, ನಾಡಧರ್ಮವನ್ನು ಎತ್ತಿಹಿಡಿದ ಮೊಟ್ಟ ಮೊದಲ ಮಹಿಳೆಯಾಗಿದ್ದಾಳೆ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ತಾಲೂಕು ಪಂಚಮಸಾಲಿ ಸಮಾಜವು ಹಮ್ಮಿಕೊಂಡಿದ್ದ ವೀರರಾಣಿ ಕಿತ್ತೂರ ಚನ್ನಮ್ಮಾಜೀಯ ೨೪೬ ನೇ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಕಿತ್ತೂರು ರಾಣಿ ಚನ್ನಮ್ಮಾ ಅವರ ಭಾವಚಿತ್ರವನ್ನು ನೋಡಿದಾಗ ಯುದ್ಧ ಮಾಡುವ ಸಂದರ್ಭದಲ್ಲಿಯೂ ಲಿಂಗವನ್ನು ಕಾಣಿಸುವಂತೆ ಹಾಕಿಕೊಂಡಿರುವದನ್ನು ನೋಡಿದಾಗ ನಾವು ವೀರಶೈವ ಲಿಂಗಾಯತ ಧರ್ಮದವರು ಎಂಬುವದನ್ನು ತೋರಿಸುತ್ತದೆ. ರಾಣಿ ಚನ್ನಮ್ಮಾಳ ಗುರುಭಕ್ತಿ, ಲಿಂಗಪೂಜೆ, ನಾಡಪ್ರೇಮ, ದೇಶಭಕ್ತಿಯ ಆದರ್ಶವನ್ನು ಇಡೀ ಸಮಾಜವು ಅನುಸರಿಸುವದು ತುಂಬಾ ಅಗತ್ಯವಿದೆ ಎಂದರು.
ದೇವರಹಿಪ್ಪರಗಿ ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಾಕಷ್ಟು ಮಹನೀಯರು ಹೋರಾಟ ಮಾಡಿದ್ದನ್ನು ಇತಿಹಾಸದಿಂದ ತಿಳಿದುಕೊಳ್ಳುತ್ತೇವೆ. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತ ಪ್ರಥಮ ಮಹಿಳೆಯೆಂದರೆ ಕಿತ್ತೂರು ರಾಣಿ ಚನ್ನಮ್ಮ ಆಗಿದ್ದಾರೆ. ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಬಂದ ಆಂಗ್ಲರ ವಿರುದ್ಧ ತನ್ನ ಪ್ರಾಣವನ್ನು ಪಣಕ್ಕಿಟ್ಟು ಹೋರಾಟ ಮಾಡುವ ಮೂಲಕ ಕಿತ್ತೂರು ಸಂಸ್ಥಾನವನ್ನು ಸಂರಕ್ಷಣೆ ಮಾಡಿದರು. ಕಿತ್ತೂರು ರಾಣಿ ಚನ್ನಮ್ಮಾಳ ಆದರ್ಶ, ವೀರತನ ಇಂದಿನ ಯುವಜನಾಂಗ ಅಳವಡಿಸಿಕೊಳ್ಳುವ ಅಗತ್ಯವಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಎಲ್ಲ ಮಹನೀಯರ ಜೀವನ ಸಂದೇಶಗಳನ್ನು ಅರಿತುಕೊಂಡು ದೇಶವನ್ನು ಪ್ರಗತಿಯತ್ತ ತೆಗೆದುಕೊಂಡು ಹೋಗಬೇಕಾದ ಅಗತ್ಯವಿದೆ ಎಂದರು.
ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ ಕೋಲಾರ ಉಪನ್ಯಾಸ ನೀಡಿದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಬಸವರಾಜ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿಯ ಸದಸ್ಯ ಎಂ.ಜಿ.ಆದಿಗೊಂಡ ಮಾತನಾಡಿದರು.
ವೇದಿಕೆಯಲ್ಲಿ ಸಾಹಿತಿ ಲ.ರು.ಗೊಳಸಂಗಿ, ನಿವೃತ್ತ ನೌಕರರ ಸಂಘದ ತಾಲೂಕಾಧ್ಯಕ್ಷ ಎಫ್.ಡಿ.ಮೇಟಿ, ಮುಖಂಡರಾದ ಬಸವರಾಜ ಹಾರಿವಾಳ, ಬಸಣ್ಣ ದೇಸಾಯಿ, ಸುರೇಶ ಹಾರಿವಾಳ, ಚಂದ್ರಶೇಖರಗೌಡ ಪಾಟೀಲ, ಜಗದೀಶ ಕೊಟ್ರಶೆಟ್ಟಿ, ಸಿದ್ದು ಉಕ್ಕಲಿ, ಬಸವರಾಜ ಕೋಟಿ, ಶಿವಾನಂದ ಮಂಗಾನವರ, ಗುರುನಗೌಡ ಬಿರಾದಾರ, ಪಿಐ ಗುರುಶಾಂತ ದಾಶ್ಯಾಳ, ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತೀರ್ಣಾಧಿಕಾರಿ ಎಸ್.ಬಿ.ನಿಂಬಾಳ ಇತರರು ಇದ್ದರು.
ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸ್ವಾಗತಿಸಿದರು. ಶಿಕ್ಷಕ ಕೊಟ್ರೇಶ ಹೆಗ್ಡಾಳ ನಿರೂಪಿಸಿದರು. ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ವಂದಿಸಿದರು.
ಅದ್ಧೂರಿ ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ತಹಸೀಲ್ದಾರ ಕಚೇರಿ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮಾಜೀಯ ಜಯಂತ್ಯೋತ್ಸವದಲ್ಲಿ ಸಮಾಜ ಬಾಂಧವರು, ಅಧಿಕಾರಿಗಳು ಭಾಗವಹಿಸಿದ್ದರು. ನಂತರ ಇಂಗಳೇಶ್ವರ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮಾಜೀಯ ನಿಯೋಜಿತ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮಾಜೀಯ ಭಾವಚಿತ್ರಕ್ಕೆ ಸಮಾಜ ಬಾಂಧವರು ಪೂಜೆ ಸಲ್ಲಿಸಿದ ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳದೊಂದಿಗೆ ಸಾರೋಟಿನಲ್ಲಿ ಕಿತ್ತೂರು ರಾಣಿ ಚನ್ನಮ್ಮಾಜೀಯ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಮೆರವಣಿಗೆಯಲ್ಲಿ ಪಂಚಮಸಾಲಿ ಸಮಾಜ ಬಾಂಧವರು ಸೇರಿದಂತೆ ವಿವಿಧ ಅಧಿಕಾರಿಗಳು, ವಿವಿಧ ಸಮಾಜ ಬಾಂಧವರು ಭಾಗವಹಿಸಿದ್ದರು.

