ವಿಜಯಪುರ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಅವಶ್ಯಕವಿರುವ ಹುದ್ದೆಗಳಿಗುಣವಾಗಿ ಸಂಸ್ಥೆಗಳಲ್ಲಿ ಅರ್ಹ ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ ನೀಡಿ, ತರಬೇತಿ ಪಡೆದ ಯುವಕರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸುವ ಮೂಲಕ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಇಂಡಸ್ಟ್ರಿಯಲ್ ಲಿಂಕೇಜ್ ಸೆಲ್ (ಐಎಲ್ಸಿ) ಯೋಜನೆ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಇಂಡಸ್ಟ್ರಿಯಲ್ ಲಿಂಕೇಜ್ ಸೆಲ್ (ಐಎಲ್ಸಿ) ಯೋಜನೆ ಆರಂಬಿಸಿದ್ದು, ಕೈಗಾರಿಕೆಗಳಿಗೆ ಅಗತ್ಯವಿರುವ ಮಾನವ ಸಂಪನ್ಮೂಲವನ್ನು ತಮ್ಮ ಉದ್ದಿಮೆಗಳ ಅವಶ್ಯಕತೆಯಂತೆ ತಮ್ಮ ಸಂಸ್ಥೆಗಳಲ್ಲಿಯೇ ತರಬೇತಿ ನೀಡುವ ಮೂಲಕ ತರಬೇತಿಯ ನಂತರ ತಮ್ಮ ಕೈಗಾರಿಕೆಗಳಲ್ಲಿಯೇ ಉದ್ಯೋಗ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ಥಳೀಯವಾಗಿಯೇ ಉದ್ಯೋಗ ದೊರಕಿಸಿ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.
ಡೇ-ನಲ್ಮ್ ಯೋಜನೆಯ ಎಲ್ಲ ಉಪ-ಘಟಕಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಪಿ.ಎಂ. ಸ್ವ-ನಿಧಿ ಅಡಿ ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ಪಡೆದು ಸಾಲ ಮಂಜೂರಾತಿ ಹಾಗೂ ವಿತರಣೆಗೆ ವಿಳಂಬವಿಲ್ಲದೇ ತುರ್ತಾಗಿ ಕ್ರಮವಹಿಸುವಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯಡಿ ಎಂಟು ಸಾಮಾಜಿಕ ಭದ್ರತಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ಹಾಗೂ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
೨೦೨೪-೨೫ನೇ ಸಾಲಿನ ಡೇ-ನಲ್ಮ್ ಅಭಿಯಾನದಡಿ ೪೨೦ ಮಹಿಳಾ ಸ್ವ-ಸಹಾಯ ಸಂಘಗಳ ರಚನೆ, ೨೬ ಒಕ್ಕೂಟ ರಚನೆ, ೧೭೧ ವೈಯಕ್ತಿಕ ಸ್ವಯಂ ಉದ್ಯೋಗ, ೧೨ ಗುಂಪು ಉದ್ಯೋಗ, ೨೩೪ ಸ್ವ-ಸಹಾಯ ಸಂಘಗಳಿಗೆ ಬ್ಯಾಂಕ್ ಲಿಂಕೆಜ್ ಗುರಿ ನಿದಿಪಡಿಸಿದ್ದು, ನಿಗದಿತ ಸಮಯದಲ್ಲಿ ಪ್ರಗತಿ ಸಾಧಿಸುವಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸಿ.ಬಿ ಕುಂಬಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಬದ್ರೂದ್ದಿನ್ ಸೌದಾಗರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಕುಮಾರ್ ಗುಣಾರಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ವಿಜಯಪುರ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಓನರ್ ಅಸೋಷಿಯೇಶನ್ ಅಧ್ಯಕ್ಷ ಎಸ್.ವಿ.ಪಾಟೀಲ, ಜಿಲ್ಲಾ ಸಣ್ಣ ಕೈಗಾರಿಕಾ ಉದ್ಯಮಿದಾರರ ಸಂಘದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಡೇ-ನಲ್ಮ್ ಅಭಿಯಾನದಡಿ ದಿ ಅರ್ಬನ್ ಲರ್ನಿಂಗ್ ಇಂಟರ್ನಷಿಫ್ ಪ್ರೊಗ್ರಾಮ ಯೋಜನೆಯಡಿ ಜಿಲ್ಲೆಗೆ ೫೮ ಗುರಿ ನಿಗದಿಪಡಿಸಿದ್ದು, ನಿಗದಿಪಡಿಸಿದಂತೆ ಕಾಲಮಿತಿಯಲ್ಲಿಯೇ ಅಧಿಕಾರಿಗಳು ಪ್ರಗತಿ ಸಾಧಿಸಬೇಕು.”
– ಟಿ.ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

“ರಾಜ್ಯದ ಖಾಸಗಿ ಕೈಗಾರಿಕೆ ತರಬೇತಿ ಕೇಂದ್ರಗಳಲ್ಲಿ (ಐಟಿಐ) ತರಬೇತಿ ಮುಗಿಸಿದ ಯುವಕರ ಪ್ರಮಾಣ ಪತ್ರಗಳಿಗೆ ಯಾವುದೇ ಫ್ಯಾಕ್ಟರಿಗಳಲ್ಲಿ ಬೆಲೆ ಇಲ್ಲ. ಅಲ್ಲಿ ಅವರಿಗೆ ಕೆಲಸವೂ ಸಿಗೊಲ್ಲ. ಕಾರಣ ಆ ಯುವಕರಿಗೆ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ ಪುನಃ ತರಬೇತಿ ನೀಡುವುದಲ್ಲದೆ, ಐಟಿಐ ಪ್ರಮಾಣ ಪತ್ರದ ಜೊತೆಗೆ ನಿಗಮದ ಪ್ರಮಾಣ ಪತ್ರವನ್ನೂ ಕಡ್ಡಾಯಗೊಳಿಸಬೇಕು. ಆಗ ಮಾತ್ರ ಐಟಿಐ ಕಲಿತ ಯುವಕರಿಗೆ ಭವಿಷ್ಯದಲ್ಲಿ ಉದ್ಯೋಗ ಭದ್ರತೆ ದೊರಕಲು ಸಾಧ್ಯ.”
– ಎಸ್.ವಿ.ಪಾಟೀಲ
ಅಧ್ಯಕ್ಷರು, ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಓನರ್ಸ್ ಅಸೋಸಿಯೇಶನ್, ವಿಜಯಪುರ

