ಜಿಲ್ಲೆಯಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ | ನರೇಗಾ ಯೋಜನೆಯಡಿ ವೈಯಕ್ತಿಕ-ಸಮುದಾಯ ಕಾಮಗಾರಿಗೆ ಅರ್ಜಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ೨೦೨೫-೨೬ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ವಿಜಯಪುರ ಜಿಲ್ಲೆಯ ೧೩ ತಾಲೂಕುಗಳ ೨೧೧ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಗ್ರಾಮ ಪಂಚಾಯತಿ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿ.ಎಫ್.ಟಿ ಗ್ರಾಮ ಕಾಯಕ ಮಿತ್ರರು ಒಟ್ಟುಗೂಡಿ “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ೨೦೨೫-೨೬ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದ ಮೂಲಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸಾರ್ವಜನಿಕರಿಗೆ ನರೇಗಾ ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವೈಯಕ್ತಿಕ/ಸಮುದಾಯ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಲು ರೈತರು ಹಾಗೂ ನರೇಗಾ ಕೂಲಿಕಾರ್ಮಿಕರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ಜೊತೆಗೆ ತಮ್ಮ ಬಳಿ ಇರುವ ಸ್ಮಾರ್ಟ್ ಫೋನ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ತಮಗೆ ಬೇಕಿರುವ ವೈಯಕ್ತಿಕ /ಸಮುದಾಯ ಕಾಮಗಾರಿಗಳಿಗೆ ಆನ್ ಲೈನ್ ನಲ್ಲಿಯೇ “ಕ್ಯೂ ಆರ್” ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಅಥವಾ https://mgnrega.karnataka.gov.in/ ಲಿಂಕ್ ಮೂಲಕ ವೈಯಕ್ತಿಕ/ ಸಮುದಾಯ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
“ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನದಡಿ ಜಿಲ್ಲೆಯ ೨೧೧ ಗ್ರಾಮ ಪಂಚಾಯತಿಗಳ ರೈತರು ಹಾಗೂ ನರೇಗಾ ಕೂಲಿಕಾರರು ಗ್ರಾಮ ಪಂಚಾಯತಿ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಅರಣ್ಯ ಇಲಾಖೆಗಳಲ್ಲಿ ಕಾಮಗಾರಿಗಳ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್ ೨ ರಿಂದ ನವ್ಹೆಂಬರ್ ೧೦ರ ವರೆಗೆ ವಿಶೇಷ ಗ್ರಾಮ ಸಭೆ ನಡೆಸಿ, ಪ್ರತಿ ಗ್ರಾಮ ಪಂಚಾಯತಿಯಲ್ಲಿ ಬೇಡಿಕೆ ಪೆಟ್ಟಿಗೆ, ಮನೆ-ಮನೆ ಭೇಟಿ, ವೈಯಕ್ತಿಕ ಕಾಮಗಾರಿಗಳ ಮಾಹಿತಿಯುಳ್ಳ ಕರಪತ್ರಗಳನ್ನು ಹಂಚಿಕೆ ಮಾಡಿ ಬೇಡಿಕೆ ಸಂಗ್ರಹಿಸಲಾಗುತ್ತಿದೆ. ಈ ಎಲ್ಲ ಬೇಡಿಕೆಗಳ ಅರ್ಜಿಗಳನ್ನು ಒಳಗೊಂಡು ವಾರ್ಡ್ ಸಭೆ ನಂತರ ಗ್ರಾಮ ಸಭೆ ನಡೆಸಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಯಲ್ಲಿ ನಡೆಯುವ ಗ್ರಾಮ ಸಭೆಗಳಿಗೆ ಸ್ವ-ಸಹಾಯ ಸಂಘಗಳ ಸದಸ್ಯರು, ರೈತರು, ಸಾರ್ವಜನಿಕರು ಹಾಗೂ ನರೇಗಾ ಕೂಲಿಕಾರ್ಮಿಕರೆಲ್ಲರೂ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

