ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ನ.೧ ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಜೊತೆಗೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಗಣ್ಯರು ಭಾಗವಹಿಸುವ ಮೂಲಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜರುಗಿದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತಂತೆ ಕರೆಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ ೧ ರಂದು ಬೆಳಗ್ಗೆ ೮ ಗಂಟೆಗೆ ತಮ್ಮ ಶಾಲಾ-ಕಾಲೇಜುಗಳಲ್ಲಿ, ವಿವಿಧ ಇಲಾಖೆಯ ಕಚೇರಿಗಳಲ್ಲಿ ನಾಡದೇವಿ ಭುವನೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನ್ನಡ ನಾಡು-ನುಡಿಗೆ ನಮನ ಸಲ್ಲಿಸಿದ ನಂತರ ೮.೩೦ ಗಂಟೆಗೆ ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭವಾಗುವ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿಗಳು, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಜನತೆ ಭಾಗವಹಿಸುವ ಮೂಲಕ ಮೆರವಣಿಗೆಯನ್ನು ಯಶಸ್ವಿಗೊಳಿಸಬೇಕು. ಮೆರವಣಿಗೆ ಮುಕ್ತಾಯದ ನಂತರ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕನ್ನಡ ರಾಜ್ಯೋತ್ಸವದ ವೇದಿಕೆ ಕಾರ್ಯಕ್ರಮ ಜರುಗುವುದು ಎಂದರು.
ಮೆರವಣಿಗೆಗೆ ಬೇಕಾದ ಎಲ್ಲ ತಯಾರಿಯನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ಮಾಡಏಕು. ಮೆರವಣಿಗೆಗೆ ಬೇಕಾದ ವಾಹನದ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯವರು ವ್ಯವಸ್ಥೆ ಮಾಡಿಕೊಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಉಪಹಾರದ ವ್ಯವಸ್ಥೆಯನ್ನು ಬಿಸಿಯೂಟದ ಅಧಿಕಾರಿಗಳು ವಹಿಸಿಕೊಳ್ಳಬೇಕು. ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಮೂಲಕ ಯಶಸ್ವಿಗೊಳಿಸಬೇಕೆಂದರು.
ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಕನ್ನಡ ಸಂಸ್ಕ್ರತಿ, ಪರಂಪರೆ ಉಳುವಿಗೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ದಿನ. ಈ ಕನ್ನಡ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಸ್ವಯಂಪ್ರೇರಿತವಾಗಿ ಎಲ್ಲರೂ ಸೇರಿ ಆಚರಿಸುವಂತಾಗಬೇಕು. ನವೆಂಬರ್ ೧ ರಂದು ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಮೇಲೆ, ವ್ಯಾಪಾರ ಮಳಿಗೆಗಳ ಮೇಲೆ ಕನ್ನಡ ಧ್ವಜವನ್ನು ಕಟ್ಟುವ ಮೂಲಕ ಕನ್ನಡಾಭಿಮಾನವನ್ನು ಮೆರೆಯುವಂತಾಗಬೇಕೆಂದರು.
ಡಿಎಸ್ಎಸ್ ಮುಖಂಡ ಅರವಿಂದ ಸಾಲವಾಡಗಿ, ಕನ್ನಡಪರ ಸಂಘಟನೆಯ ಮುಖಂಡ ಮಹಾಂತೇಶ ಚಕ್ರವರ್ತಿ ಇತರರು ಮಾತನಾಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜು ಹಿರೇಮನಿ, ಉಪನೋಂದಾಣಾಧಿಕಾರಿ ದೇವಪ್ಪ, ಲೋಕೋಪಯೋಗಿ ಇಲಾಖೆಯ ಎಇಇ ಜೆ.ಬಿ.ಕಿರಸೂರ, ಕೃಷಿ ಇಲಾಖೆಯ ಅಧಿಕಾರಿ ಎಂ.ಎಚ್.ಯರಝರಿ, ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್.ಅವಟಿ, ಪಶು ಇಲಾಖೆಯ ಡಾ.ಶಂಖ, ಪಿಎಸ್ಐ ಐ.ಎಂ.ದುಂಡಸಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಡೋಣೂರ, ಮುಖಂಡರಾದ ಮಹಾಂತೇಶ ಸಾಸಬಾಳ, ಮನ್ನಾನ ಶಾಬಾದಿ, ಸುನೀಲ ರಾಠೋಡ, ಸುನೀಲ ಚಿಕ್ಕೊಂಡ, ಎ.ಐ.ಮಠಪತಿ, ತಮ್ಮಣ್ಣ ಕಾನಾಗಡ್ಡಿ ಇತರರು ಇದ್ದರು.

