ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯಾಗಾರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಸ್ತುತ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾಗಿದ್ದು, ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮಾರ್ಗಗಳನ್ನು ಕಲಿಯಲು ಈ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಮ್.ಪಾಟೀಲ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಮತ್ತು ವ್ಯವಹಾರ ನಿರ್ವಹಣೆ ಅಧ್ಯಯನ ವಿಭಾಗಗಳು ಹಾಗೂ ನವದೆಹಲಿಯ ಐಸಿಎಸ್ಎಸ್ಆರ್ ಪ್ರಾಯೋಜಕತ್ವದಲ್ಲಿ ಜಂಟಿಯಾಗಿ ಆಯೋಜಿಸಿದ್ದ ‘ಶೈಕ್ಷಣಿಕ ಸಂಶೋಧನಾ ಬರವಣಿಗೆ’ ಎಂಬ ವಿಷಯದ ಕುರಿತು ಎರಡು ವಾರಗಳ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಈ ಕಾರ್ಯಾಗಾರ ದೈಹಿಕ ಶಿಕ್ಷಣ, ಸಮಾಜ ವಿಜ್ಞಾನ, ವಾಣಿಜ್ಯ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಸಂಶೋಧನೆಯಲ್ಲಿ ಎದುರಿಸಬೇಕಾದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮುಖ್ಯ ವೇದಿಕೆಯಾದಂತಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕುಪ್ಪಂ ದ್ರಾವಿಡಿಯನ್ ಯೂನಿವರ್ಸಿಟಿಯ ಡೀನ್ ಪ್ಯಾಕಲ್ಟಿ ಸ್ಕೂಲ್ ಆಫ್ ಎಜುಕೇಶನ್ ಪ್ರೊ. ಡಿ ಶ್ರೀನಿವಾಸ ಕುಮಾರ್ ಮಾತನಾಡಿ, ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಆಸಕ್ತಿಯುತ ಕ್ಷೇತ್ರದಲ್ಲಿ ಸಂಶೋಧನೆಯನ್ನು ಕೈಗೊಂಡರೆ ಉತ್ತಮವಾದ ಫಲಿತಾಂಶವನ್ನು ನೀಡಬಹುದು ಮತ್ತು ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಬಹುದು ಎಂದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾರ್ಯಾಗಾರದ ನಿರ್ದೇಶಕ ಪ್ರೊ..ರಾಜಕುಮಾರ್ ಮಾಲಿಪಾಟೀಲ್ ಮಾತನಾಡಿ, ಸಂಶೋಧನಾ ವಿದ್ಯಾರ್ಥಿಗಳಿಗೆ ಈ ಕಾರ್ಯಾಗಾರ ತುಂಬಾ ಉಪಯುಕ್ತವಾಗಿತ್ತು ಎಂದರು.
ಕಾರ್ಯಗಾರದ ಸಹಸಯೋಜಕ ಡಾ. ಚಂದ್ರಶೇಖರ ಮಠಪತಿ, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

