ದೌರ್ಜನ್ಯ ಪ್ರತಿಬಂಧ ಅಧಿನಿಯಮ-ಅಸ್ಪೃಶ್ಯತೆ ನಿವಾರಣೆ ಅರಿವು ಮೂಡಿಸುವ ವಿಚಾರಗೋಷ್ಠಿ- ಕಾರ್ಯಾಗಾರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜದಲ್ಲಿ ಉತ್ತಮ ಬದಲಾವಣೆಯನ್ನು ತರಲು ನಮ್ಮ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಪ್ರತಿಯೊಬ್ಬರು ಜಾಗೃತ ಹೊಂದುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಹೇಳಿದರು.
ಸೋಮವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖಾ ಕಾರ್ಯಕ್ರಮಗಳ ಮಾಹಿತಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಸ್ಪ್ರಶ್ಯತೆಯಂತಹ ಅನಿಷ್ಟ ಪದ್ದತಿಗಳು ವರದಿಯಾದ ತಕ್ಷಣ ಘಟನೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಲಾಗುತ್ತದೆ. ಸಮಾಜದಲ್ಲಿನ ಪ್ರತಿಯೊಬ್ಬರು ಮೇಲು-ಕೀಳು ಭಾವನೆ ತೊಡೆದು ಹಾಕಬೇಕು ಎಂದು ಅವರು ಹೇಳಿದರು.
ಪ್ರತಿಯೊಬ್ಬರು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು, ಬಾಬಾ ಸಾಹೇಬ ಅಂಬೇಡ್ಕರ್, ಸೇರಿದಂತೆ ಮಹನೀಯರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಜಿಲ್ಲಾ ಸಲಹಾ ಸಮಿತಿ ಸದಸ್ಯ ಅಭಿಷೇಕ ಚಕ್ರವರ್ತಿ ಮಾತನಾಡಿ, ಸೌಲಭ್ಯಗಳ ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕ-ಶೈಕ್ಷಣಿಕವಾಗಿ ಸಬಲತೆ ಹೊಂದಬೇಕು. ಸಮಾಜದಲ್ಲಿ ಸೌಹಾರ್ದತೆಯಿಂದ ಬಾಳಲು ಪೊಲೀಸ್ ಇಲಾಖೆ ಕೂಡ ಸಹಕಾರ ನೀಡಬೇಕು. ಬುದ್ದ, ಬಸವ, ಡಾ. ಅಂಬೇಡ್ಕರ ಅವರ ಕನಸುಗಳು ಸಾಕಾರಗೊಳ್ಳಬೇಕು. ಸಾಕಾರಗೊಳ್ಳುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಸಾರ್ವಜನಿಕರು ಇಂತಹ ಕಾರ್ಯಾಗಾರಗಲ್ಲಿ ಭಾಗವಹಿಸಿ, ಜಾಗೃತಿ ಹೊಂದಬೇಕು ಎಂದು ಹೇಳಿದರು.
ನ್ಯಾಯವಾದಿಗಳಾದ ಶಿವುಕುಮಾರ ಪೂಜಾರಿ ಉಪನ್ಯಾನ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ನಾಗರಾಜ ಲಂಬು, ಅಡಿವೆಪ್ಪ ಸಾಲಗಲ್, ಸಿದ್ದು ರಾಯಣ್ಣವರ, ರಾವುತ ತಳಗೇರಿ, ನಿರ್ಮಲಾ ಹೊಸಮನಿ, ಬಿ.ಎಸ್.ಗಸ್ತಿ, ಮಲ್ಲು ಬಿಜ್ಜೂರ, ಸೋಮಲು ಲಮಾಣಿ, ಮಹಾಂತೇಶ ಸಾಸಬಾಳ, ಪರಶುರಾಮ ದಿಂಡವಾರ, ಬಾಬು ಸಜ್ಜನ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನ, ರಸ್ತೆ, ಸಾಮಾಜಿಕ ನ್ಯಾಯ ಹೊಲಗಳಲ್ಲಿ ಕಾಲುದಾರಿ ಹಲವು ಸಮಸ್ಯೆಗಳಿಗೆ,ನಮ್ಮ ವ್ಯಾಪ್ತಿಗೆ ಬರದಿದ್ದರೂ ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಕ್ರಮ ವಹಿಸಲಾಗುತ್ತಿದೆ.”
– ಪ್ರಸನ್ನ ದೇಸಾಯಿ
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಅಸ್ಪ್ರಶ್ಯತೆ ಕುರಿತು ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಶ್ಪೃಶ್ಚತೆ ಅನ್ನುವುದು ಮನಸ್ಸಿನಿಂದ ಮರೆಯಾಗಬೇಕು. ಮಾನಸಿಕ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಂವಿಧಾನಬದ್ಧ ಹಕ್ಕು ಮತ್ತು ಪ್ರತಿಯೊಬ್ಬರಿಗೂ ಸೌಲಭ್ಯ ದೊರಕಬೇಕು. ಅದರಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಶಿಕ್ಷಣ ಪಡೆಯುವ ಮೂಲಕ ಜಾಗೃತಿ ಹೊಂದಬೇಕು.”
– ಸೋಮಲಿಂಗ ಗೆಣ್ಣೂರ
ಅಪರ ಜಿಲ್ಲಾಧಿಕಾರಿ

