ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯಿರಿ | ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!
ಬೆಂಗಳೂರು: ವಕ್ಫ್ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಶನಿವಾರ ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು.
ಈ ವೇಳೆ ವಕ್ಫ್ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನೋಟಿಸ್ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದು ಈ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಕ್ಫ್ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಿದ್ದರಾಮಯ್ಯ ವಿನಂತಿ ಮಾಡಿದ್ದು ಅವರ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಜನತೆಗೆ ಮನವಿ ಮಾಡಿದರು.
ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್ಗಳನ್ನು ತಕ್ಷಣ ವಾಪಸ್ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಖಡಕ್ ಸೂಚನೆ ನೀಡಿದರು.

ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ
ಬೆಂಗಳೂರು: ವಕ್ಫ್ (ತಿದ್ದುಪಡಿ) ಮಸೂದೆ 2024 ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಕರ್ನಾಟಕದ ವಿಜಯಪುರ ಜಿಲ್ಲೆಯ ರೈತರನ್ನು ವಕ್ಫ್ ಮಂಡಳಿಯೊಂದಿಗೆ ಚರ್ಚಿಸಲು ಆಹ್ವಾನಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.
ವಿಜಯಪುರ ಮತ್ತು ಕರ್ನಾಟಕದ ಇತರ ಜಿಲ್ಲೆಗಳ ರೈತರ ಜಮೀನನ್ನು ವಕ್ಫ್ ಆಸ್ತಿಯನ್ನಾಗಿ ಘೋಷಿಸುವ ಕುರಿತು ಬಂದಿರುವ ನೋಟಿಸ್ಗಳ ಕುರಿತು, ಜಗದಾಂಬಿಕಾ ಅವರಿಗೆ ಪತ್ರ ಬರೆದಿದ್ದೇನೆ. ನೋಟಿಸ್ಗಳ ಹೊರತಾಗಿಯೂ ಹಲವರ ಆರ್ ಟಿ ಸಿ, ಪಹಣಿ ಗಳಲ್ಲಿಯೂ ಯಾವುದೇ ಸಮರ್ಪಕ ಕಾನೂನುಗಳನ್ನು ಪಾಲಿಸದೇ ವಕ್ಫ್ ಆಸ್ತಿಗಳೆಂದು ತಿದ್ದುಪಡಿ ಮಾಡಲಾಗಿದ್ದು, ಈ ರೀತಿ ತೊಂದರೆಗೆ ಒಳಗಾಗಿರುವ ರೈತರ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸುಬೇಕು. ಇದರಿಂದ ವಕ್ಫ್ನಿಂದ ಆಗಿರುವ ಭೂಮಿ ಅತಿಕ್ರಮಣದ ನೇರ ಮಾಹಿತಿ ದೊರಕಲಿದೆ’ ಎಂದು ಮನವಿ ಮಾಡಿದ್ದಾರೆ.

