ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲರಿಂದ ಸಾರ್ವಜನಿಕರ ಕುಂದು-ಕೊರತೆ, ಆಲಿಕೆ | ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಗ್ರಾಮ ಮಟ್ಟದ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಆದ್ಯತೆ ಮೇಲೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸುವಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ಜವಾಬ್ದಾರಿಯನ್ನು ನಿರ್ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಬೇಕು. ಜಿಲ್ಲೆಯಾದ್ಯಂತ ಪೂರ್ಣ ಪ್ರಮಾಣದಲ್ಲಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಚರಂಡಿಯ ನೀರು ಒಂದೆಡೆ ನಿಲ್ಲದೇ ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅವರು ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಅವಿಭಕ್ತ ಕುಟುಂಬಗಳು ವಾಸಿಸುತ್ತಿದ್ದು, ಇಂತಹ ಕುಟುಂಬಗಳಿಗೆ ಸಮುದಾಯ ಶೌಚಾಲಯ ನಿರ್ಮಿಸಿ, ಸೌಕರ್ಯಗಳನ್ನು ಒದಗಿಸುವುದನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಗಳು ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಶೌಚಾಲಯ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ನಿಗದಿತ ನಮೂನೆಯನ್ನು ರೂಪಿಸಿಕೊಂಡು ಜಿಲ್ಲೆಯಾದ್ಯಂತ ಶೌಚಾಲಯ ಬಳಸದೇ ಇರುವ ಕುಟುಂಬಗಳನ್ನು ಗುರುತಿಸಿ ತಿಳುವಳಿಕ-ಜಾಗೃತಿ ಮೂಡಿಸಬೇಕು. ಈ ಕುರಿತು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತೀವ್ರ ನಿಗಾ ವಹಿಸುವಂತೆ ಅವರು ಸೂಚನೆ ನೀಡಿದರು.
ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ವಿದ್ಯುತ್ ಪರಿವರ್ತಕಗಳಿಗೆ ರೈತರು ಹೆಸ್ಕಾಂಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಪರಿಶೀಲನೆ ನಡೆಸಿ, ಆದ್ಯತೆ ಮೇಲೆ ರೈತರ ಬೇಡಿಕೆಗನುಗುಣವಾಗಿ ವಿದ್ಯುತ್ ಪರಿವರ್ತಕಗಳನ್ನು ಒದಗಿಸಲು ಕ್ರಮ ವಹಿಸಬೇಕು. ಬಾಕಿ ಇರುವ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ ವಹಿಸಬೇಕು ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ವರ್ಷಕ್ಕೆ ೫ ಲಕ್ಷ ಸಸಿ ನೆಡುವ ಗುರಿ ಹಾಕಿಕೊಳ್ಳುವ ಮೂಲಕ ಅರಣ್ಯೀಕರಣಕ್ಕೆ ಮುಂದಾಗಬೇಕು. ನರೇಗಾ ಯೋಜನೆಯಡಿ ಸಾಮಾಜಿಕ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ೧.೩೦ ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಗುರಿ ಹಾಕಿಕೊಂಡಿರುವುದಕ್ಕೆ ಲೋಕಾಯುಕ್ತರು ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಲೋಕಾಯುಕ್ತ ಡಿವೈಎಸ್ಪಿ ಸುರೇಶ ರೆಡ್ಡಿ, ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ಈಗಾಗಲೇ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದಂತೆ ಹಲವು ಬಾರಿ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಾಗಿದ್ದು, ಕಾರ್ಖಾನೆಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಕಬ್ಬು ನುರಿಸುವ ಕಾರ್ಖಾನೆಗಳು ಎಲ್ಲ ನಿಯಮಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಈಗಾಗಲೇ ಸೂಚನೆ ನೀಡಿದ್ದರ ಮೇರೆಗೆ ಹಲವು ಬಾರಿ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು, ತೂಕ ಮತ್ತು ಅಳತೆ ಮಾಪನ ಇಲಾಖೆ ಅಧಿಕಾರಿಗಳು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಜಿಲ್ಲೆಯ ಕೆರೆಗಳ ಸಂರಕ್ಷಣೆಗಾಗಿ ಈಗಾಗಲೇ ತಮ್ಮ ನಿರ್ದೇಶನದಂತೆ ತಾಲೂಕಾ ಮಟ್ಟದಲ್ಲಿ ಸಮಿತಿ ರಚಿಸಿಕೊಂಡು ಕೆರೆಗಳ ಪುನಶ್ಚೇತನಕ್ಕಾಗಿ ಕೆರೆ ಅಭಿವೃದ್ದಿಗೆ ಕ್ರಮ ವಹಿಸಲಾಗುತ್ತಿದೆ.”
– ಟಿ.ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಪ್ರಶಂಸೆ
ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ಬಿ.ಎಸ್.ಪಾಟೀಲ ಅವರು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಕಾರ್ಯವೈಖರಿ ಕುರಿತು ಪ್ರಶಂಸೆ ವ್ಯಕ್ತಪಡಿಸಿ, ಪ್ರತಿದಿನ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಸೇರಿದಂತೆ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಗುಣಮಟ್ಟದ ಆಹಾರ ನೀಡುವ ಮೂಲಕ ಮತ್ತಷ್ಟು ಕಾರ್ಯಕ್ಕೆ ಮುಂದಾಗಬೇಕು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ
ಅವರು ಹೇಳಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಿ
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಬೇಕು. ಕಬ್ಬು ಪೂರೈಸುವ ರೈತರಿಗೆ ನಿಗದಿತ ದರ ಪಾವತಿಸಲು ಕ್ರಮ ವಹಿಸಬೇಕು. ಕಬ್ಬು ಪೂರೈಸುವ ರೈತರಿಗೆ ತೂಕದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಂಡು ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸಿಸಿಟಿವಿ ನಿಗಾವಣೆಯಲ್ಲಿ ತೂಕ ಮಾಡಬೇಕು. ಕಾರ್ಖಾನೆಗಳು ರೈತರಿಗೆ ನಿಗದಿತ ಅವಧಿಯಲ್ಲಿ ಹಣ ಸಂದಾಯ ಮಾಡಬೇಕು. ಸಕ್ಕರೆ ಕಾರ್ಖಾನೆಗಳಿಗೆ ಅಧಿಕಾರಿಗಳು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದರು.

