ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜೀವನದಲ್ಲಿ ಸಾಧನೆ ಮಾಡಲು ಮನಸ್ಸು ಮುಖ್ಯ, ಮನಸ್ಸಿದ್ದಲ್ಲಿ ಮಾರ್ಗ ಎಂಬಂತೆ ವಿಶೇಷ ಚೇತನರು ಒಂದು ವಿಶೇಷ ಸದೃಢ ಮನಸ್ಸು ಹೊಂದಿರುತ್ತಾರೆ. ಸಾಧನೆಗೆ ಯಾವುದೂ ಅಡ್ಡಿಯಾಗಲಾರದು. ಆತ್ಮವಿಶ್ವಾಸದಿಂದ ಎಂತಹ ಸನ್ನಿವೇಶ-ಸಂದರ್ಭವನ್ನು ಛಲದಿಂದ ಎದುರಿಸಿ ಸಾಧನೆಗೆ ಮುಂದಾಗುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಧನೆ ಸಾಧಕನ ಸೊತ್ತು. ದೃಢ ಮನಸ್ಸು ಹೊಂದಿ, ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಹೇಳಿದರು.
ಜೀವನದಲ್ಲಿ ಆಶಾಭಾವನೆ ಹೊಂದಿರಬೇಕು. ಸದಾ ಪ್ರಯತ್ನವಾದಿಯಾಗಿರಬೇಕು. ಸತತ ಪ್ರಯತ್ನ ಯಶಸ್ವಿಗೆ ಸಹಕಾರಿಯಾಗಿದೆ. ಜೀವನದಲ್ಲಿ ಸಾಧನೆ ಮಾಡಲು ಮಾನಸಿಕ ದೃಢತೆ ಹೊಂದಬೇಕು. ಮಾನಸಿಕವಾಗಿ ಸದೃಢತೆಯಿಂದ ಸಾಧನೆಯ ಶಿಖರವನ್ನೇರಬಹುದಾಗಿದೆ ಎಂದು ಅವರು ಹೇಳಿದರು.
ವಿಶೇಷಚೇತನರಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಡಳಿತವೂ ಸಹ ಸದಾ ವಿಶೇಷ ಚೇತನರ ಕುಂದು ಕೊರತೆಗಳಿಗೆ ಸ್ಪಂದಿಸುತ್ತದೆ. ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಸವಿತಾ ಕಾಳೆ ಅವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ರಾಜೇಶ ಪವಾರ, ಬಂದೇನವಾಜ ಕಲ್ಲೂರ, ಮೋದಿನ ಪಾಶ, ಅಶೋಕ ವಾಲಿಕಾರ, ಶಶಿಕಲಾ ಸೋನಾರ, ಸುಮೀತ ಪಾಂಡಿಚೇರಿ, ಸಂಜೀವ ಭವನಸಿಂಗ್ ಹಜೇರಿ, ಅಂಬಣ್ಣಾ ಗುನ್ನಾಪುರ ರಶ್ಮಿ ಚಿತ್ತವಾಡಗಿ, ಮೌಲಾಲಿಕ ಮಂಟೂರ ಅವರನ್ನು ಸನ್ಮಾನಿಸಲಾಯಿತು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಎಆರ್ ಡಿವೈಎಸ್ಪಿ ಡಿ.ವೈ.ಧನಗರ, ವಾರ್ತಾಧಿಕಾರಿ ಅಮರೇಶ ದೊಡಮನಿ, ನಿಮಿಷ ಆಚಾರ್ಯ, ವಿನೋದ ಖೇಡ, ರಶ್ಮಿ ಚಿತ್ತವಾಡಗಿ, ಉಪಾಧ್ಯಾಯ, ಫಾದರ್ ಟಿಯೋಲ್ ಮಚಾದೋ ಸೇರಿದಂತೆ ಜಿಲ್ಲೆಯ ಎಲ್ಲ ಎಂಆರ್ಡಬ್ಲೂ, ವಿಆರ್ಡಬ್ಲೂ, ಯುಆರ್ಡಬ್ಲೂ ಒಕ್ಕೂಟ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳು ಉಪಸ್ಥಿತರಿದ್ದರು.
ತ್ರಿ-ಚಕ್ರ ವಾಹನ ಜಾಥಾ
ಇದಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಡೆದ ಇಂಧನ ಚಾಲಿತ ತ್ರಿ-ಚಕ್ರ ವಾಹನ ಜಾಥಾ ಜರುಗಿತು.
“ಜಿಲ್ಲೆಯಲ್ಲಿ 45,353 ಜನ ವಿಕಲಚೇತನರಿದ್ದು, ಈ ಪೈಕಿ 33,251 ಜನರಿಗೆ ಯುಡಿಐಡಿ ಕಾರ್ಡಗಳನ್ನು ವಿತರಿಸಲಾಗಿದೆ. ಯುಡಿಐಡಿ ಕಾರ್ಡ ಪಡೆದ ಎಲ್ಲ ವಿಕಲಚೇತನರಿಗೆ ವಿವಿಧ ಸಾಧನ-ಸಲಕರಣೆಗಳು, ವಿದ್ಯಾರ್ಥಿವೇತನ, ಇಂಧನ ಚಾಲಿತ ತ್ರಿಚಕ್ರ ವಾಹನ, ಲ್ಯಾಪ್ಟಾಪ್, ಬ್ರೈಲ್ಕಿಟ್ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಹೊಲಿಗೆಯಂತ್ರ ಸೇರಿದಂತೆ ಇನ್ನಿತರ ಸಾಧನ ಸಲಕರಣೆಗಳನ್ನು ಒದಗಿಸಲಾಗುತ್ತಿದೆ. ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳನ್ನು ಮನೆಬಾಗಿಲಿಗೆ ತಲುಪಿಸಲು ಸರ್ಕಾರ, ಜಿಲ್ಲಾಡಳಿತ, ಸ್ವಯಂ ಸೇವಾ ಸಂಸ್ಥೆಗಳು ಕಾರ್ಯೋನ್ಮುಖವಾಗಿವೆ.”
– ಸವಿತಾ ಕಾಳೆ
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ

