ಯತ್ನಾಳರೊಂದಿಗೆ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥದ ಆಶಯ ವ್ಯಕ್ತಪಡಿಸಿದ ಮಾಜಿ ಸಿಎಂ ಯಡಿಯೂರಪ್ಪ
ಶಿವಮೊಗ್ಗ: ಬಿಜಾಪುರ ಶಾಸಕ ಮತ್ತು ಸದಾ ತಮ್ಮನ್ನು ಟೀಕಿಸುವ ಬಸನಗೌಡ ಪಾಟೀಲ್ ಯತ್ನಾಳ್ ಅವರು “ಹೊರಗಿನವರಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರಾಗಿರುವ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರು ಪಕ್ಷವನ್ನು ಬಲಪಡಿಸುವಲ್ಲಿ ನಿಟ್ಟಿನಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂದು ಸಲಹೆ ನೀಡಿದರು.
ಯತ್ನಾಳ್ ಅವರು ಹೊರಗಿನವರಲ್ಲ, ಕೆಲವು ಕಾರಣಗಳಿಂದ ಅವರು ಆಕ್ರೋಶಗೊಂಡಿರಬಹುದು. ಮಾತನಾಡೋಣ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬುದು ನನ್ನ ನಿರೀಕ್ಷೆ. ಇದು ವಿಜಯೇಂದ್ರ ಅವರ ನಿರೀಕ್ಷೆಯೂ ಹೌದು ಎಂದು ಮಾಜಿ ಮುಖ್ಯಮಂತ್ರಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಯಾವುದೇ ಲೋಪದೋಷಗಳಿದ್ದರೆ ಎದುರು-ಬದುರು ಕುಳಿತು ಚರ್ಚಿಸಿ, ಇತ್ಯರ್ಥಪಡಿಸಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಇದು ನನ್ನ ಅಭಿಪ್ರಾಯ. ಇದಕ್ಕೆ ಎಲ್ಲರೂ ಸಹಕರಿಸುತ್ತಾರೆ ಎಂದು ಆಶಿಸುತ್ತೇನೆ ಎಂದರು.
ಯತ್ನಾಳ್ ಅವರು ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವುದರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಅವರು ಮಾತನಾಡಲಿ, ಆದರೆ ನಾವು ಎಲ್ಲವನ್ನೂ ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದರು.
ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಹಿರಂಗವಾಗಿಯೇ ಟೀಕಿಸಿದ್ದ ಯತ್ನಾಳ್ ಅವರು, ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರು ಪಕ್ಷವನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಭ್ರಷ್ಟಾಚಾರ ಕುರಿತು ಹೈಕಮಾಂಡ್ ಗೆ ಯತ್ನಾಳ ಪತ್ರ
ರಾಜ್ಯ ಬಿಜೆಪಿಯಲ್ಲಿ ಚಾಲ್ತಿಯಲ್ಲಿರುವ ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ವಂಶಾಡಳಿತ ರಾಜಕೀಯದ ಕುರಿತು ಪಕ್ಷದ ನಾಯಕತ್ವಕ್ಕೆ ವಿವರವಾಗಿ ವಿವರಿಸಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ಬಿಜೆಪಿಯಿಂದ ಶೋಕಾಸ್ ನೋಟಿಸ್ ಸಂಬಂಧ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಕೇಂದ್ರ ಶಿಸ್ತು ಸಮಿತಿ (ಸಿಡಿಸಿ) ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರಿಗೆ ಆರು ಪುಟಗಳ ಉತ್ತರವನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಉತ್ತರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಆಂಧ್ರಪ್ರದೇಶಗಳು ಈಗ ಹಿಂದುತ್ವದತ್ತ ವಾಲುತ್ತಿರುವ ಕಾರಣ ನಮ್ಮ ಪಕ್ಷವು ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ, ವಂಶಾಡಳಿತ ರಾಜಕಾರಣದ ಕಪಿಮುಷ್ಠಿಯಿಂದ ಹೊರಬರಬೇಕು. ಅಲ್ಲದೆ ಹಿಂದುತ್ವದ ಪರ ಧ್ವನಿ ಗಟ್ಟಿಯಾಗಬೇಕು ಎಂದು ತಮ್ಮ ಪತ್ರದಲ್ಲಿ ಬರೆದಿರುವುದಾಗಿ ಹೇಳಿದರು.

