ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾಮಾಜಿಕ ಜಾಗೃತಿ, ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವ ಮೂಲಕ ವೈಯಕ್ತಿಕ ಮತ್ತು ಸಾಮೂಹಿಕ ಪ್ರಗತಿಗೆ ಎನ್.ಎಸ್.ಎಸ್. ದಾರಿ ಮಾಡಿಕೊಡುತ್ತದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ ಡೊಂಗ್ರೆ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಸ್ನಾತಕ ‘ಬ’ ಹಾಗೂ ಮುಕ್ತ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಬುಧವಾರ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಮುಖಂಡತ್ವದ ಗುಣಗಳು, ನೈತಿಕತೆ, ಶಿಸ್ತು ಮತ್ತು ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುತ್ತದೆ. ರಾಷ್ಟ್ರಸೇವೆ ಮತ್ತು ಸಮಾಜಸೇವೆಯ ಮೂಲಕ ಯುವಜನರನ್ನು ಜವಾಬ್ದಾರಿಯುತ ಪ್ರಜೆಗಳಾಗಿ ರೂಪಿಸುವಲ್ಲಿ ಎನ್ಎಸ್ಎಸ್ ಮಹತ್ವದ ಪಾತ್ರವಹಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳಿಗೆ ಸೇವೆಯ ಜೊತೆಗೆ ಅನುಭವ ಆಧಾರಿತ ಕಲಿಕೆಯನ್ನು ಒದಗಿಸುವ ವಿಶಿಷ್ಟ ವೇದಿಕೆಯಾಗಿವೆ. ಈ ಶಿಬಿರಗಳು ಶಿಕ್ಷಣವನ್ನು ವರ್ಗಕೋಣೆಯ ಸೀಮಿತ ಕ್ಷೇತ್ರದಿಂದ ಹೊರತಾಗಿ ಸಮುದಾಯದ ನೈಜ ಪರಿಸ್ಥಿತಿಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಮತ್ತು ವಿದ್ಯಾರ್ಥಿಗಳಿಗೆ ರಸಪ್ರಶ್ನೆಯನ್ನು ಕೇಳುವ ಮುಖಾಂತರ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಕೋಶದ ಸಂಯೋಜನಾಧಿಕಾರಿ ಅಶೋಕ ಕೆ ಸುರಪುರ ಮಾತನಾಡಿ, ಲಾರ್ಡ್ ಮೌಂಟ್ ಬ್ಯಾಟನ್ ಸೇವೆಯ ಪದಕ್ಕೆ ಅರ್ಥ ಸಿಕ್ಕಿದ್ದು ಹಾಗೆಯೇ ನಿಮ್ಮಿಷ್ಟಕ್ಕೆ ನೀವು ತೊಡಗಿಸಿಕೊಂಡು ಸೇವೆಯ ಮನೋಭಾವ ಬೆಳೆಸಿಕೊಂಡರೆ ದೇಶದ ಪ್ರಗತಿ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಪ್ರಾಧ್ಯಾಪಕರು ಮತ್ತು ಎನ್.ಎಸ್.ಎಸ್ ಸ್ನಾತಕ ‘ಬ’ ಹಾಗೂ ಮುಕ್ತ ಘಟಕಗಳ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಕಲಾವತಿ ಕಾಂಬಳೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಅಶ್ವಿನಿ ಕೆ ಎನ್ ಸ್ವಾಗತಿಸಿದರು. ಸೌಜನ್ಯ ನಿರೂಪಿಸಿದರು. ಡಾ. ಅಮರನಾಥ ಪ್ರಜಾಪತಿ ವಂದಿಸಿದರು.

