ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ಪದಾಧಿಕಾರಿಗಳಿಂದ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷೆ ಕಾಳಮ್ಮ ಬಡಿಗೇರ ಮಾತನಾಡಿ, ಶಾಲೆಗಳಲ್ಲಿ ಗ್ರೂಪ್ “ಡಿ” ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ. ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಆಡುಗೆಯವರು ಇರಲೇಬೇಕು. ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ ೬೦೦೦ ರೂ ಗಳ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಅಣ್ಣಾರಾಯ ಈಳಗೇರ ಮಾತನಾಡಿ, ೨೦೧೪ ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರಸರ್ಕಾರವು ೨೬,೦೦೦ ರೂ ಗಳಿಗೆ ಗೌರವಧನ ಹೆಚ್ಚಿಸಬೇಕು. ಸರ್ಕಾರವು ರಾಜ್ಯದಲ್ಲಿ ಈ ಯೋಜನೆಯ ಅಭಿವೃದ್ಧಿಗೆ ದುಡಿಯುತ್ತಿರುವ ೧ ಲಕ್ಷ ೧೮ ಸಾವಿರ ಬಡಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಕೂಡಲೇ ವೇತನ ಹೆಚ್ಚಳ ಮಾಡಲು ಮುಂದಾಗಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ, ಖಜಾಚಿ ಸುವರ್ಣಾ ರಾಠೋಡ, ಉಪಾಧ್ಯಕ್ಷ ಬಿಸ್ಮಿಲ್ಲಾ ಇನಾಮದಾರ, ಉಪಾಧ್ಯಕ್ಷೆ ಸುರೇಖಾ ವಾಘಮೋಡೆ, ಜಯಶ್ರೀ ಪಾರ್ಥಗೋಳ, ಸುಜಾತಾ ಚಿಂಚೋಳಿ, ಶೈಲಾ ಮಾಳಗೆ, ಸುಮಿತ್ರಾ, ರಾಜಶ್ರೀ ಹತ್ತಿ, ಭಾರತಿ ಮಧಭಾವಿ, ಸುಭದ್ರಾ ತಿಳಗೂಳ, ರೇಣುಕಾ ಸುಣಗಾರ, ಮೀನಾಕ್ಷಿ ಶಿಂಧೆ, ರೇಣುಕಾ ಮುತ್ತಗಿ, ವಿಜಯಾ ಬಾಬರ, ದೇವುಬಾಯಿ ನಾಯಕ, ಅನ್ನಪೂರ್ಣಾ ಲೋಗಾಂವಿ, ಶಾಂತಾ ಹಿರೇಮಠ, ಸೈನಾಜ ಸೌಧಾಗರ, ದಾನಮ್ಮ ಹೊನ್ನುಟಗಿ, ನೂರಜಾನ ಕೆಂಭಾವಿ, ಅಂಬಕ್ಕ ಜಾಧವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

