ಗುತ್ತಿಗೆದಾರ ಸಚಿನ್ ಪಾಂಚಲ್ ಆತ್ಮಹತ್ಯೆ ಪ್ರಕರಣ | ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
ಕಲಬುರಗಿ: ಬೀದರ್ ಮೂಲದ ಸಿವಿಲ್ ಗುತ್ತಿಗೆದಾರ ಸಚಿನ್ ಪಾಂಚಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಜಗತ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡರು. ಪೊಲೀಸ್ ಬಿಗಿ ಭದ್ರತೆ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪ್ರಿಯಾಂಕ್ ಖರ್ಗೆ ಅವರ ನಿವಾಸದ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆಯಿಂದ ಸುಸ್ತಾಗಿ ಬರುವ ಬಿಜೆಪಿ ನಾಯಕರಿಗೆ ತೆಂಗಿನಕಾಯಿ, ಕಾಫಿ, ಟೀ, ಕುಡಿಯುವ ನೀರಿನ ಬಾಟಲಿ ನೀಡುವ ಮೂಲಕ ಉಪಚರಿಸಿದದ್ದು ವಿಶೇಷವಾಗಿ ಗಮನ ಸೆಳೆಯಿತು.

ಪ್ರತಿಪಕ್ಷಗಳ ಒತ್ತಡದ ತಂತ್ರಕ್ಕೆ ಮಣಿಯುವುದಿಲ್ಲ :ಖರ್ಗೆ
ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಪ್ರತಿಪಕ್ಷಗಳ ಬೇಡಿಕೆ ಮತ್ತು ಒತ್ತಡದ ತಂತ್ರಕ್ಕೆ ನಾನಾಗಲೀ ಅಥವಾ ಸರಕಾರವಾಗಲೀ ಮಣಿಯುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಹಲವು ಪ್ರಕರಣಗಳಿವೆ ಎಂದು ಹೇಳಿದರು.

ಕಾಪನೂರ ಮೇಲೆ ಕಠಿಣ ಕ್ರಮಕ್ಕೆ ಡೆತ್ ನೋಟ್ ನಲ್ಲಿ ಉಲ್ಲೇಖ
ಡಿಸೆಂಬರ್ 26 ರಂದು ಬೀದರ್ ಜಿಲ್ಲೆಯಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ರಾಜು ಕಾಪನೂರ ಅವರು ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಕಪನೂರ ಅವರಿಗೆ ಒಂದು ಕೋಟಿ ರೂಪಾಯಿ ನೀಡುವಂತೆ ಕೊಲೆ ಬೆದರಿಕೆ ಹಾಕಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ಡೆತ್ ನೋಟ್ ನಲ್ಲಿ ತಮ್ಮ ಹೆಸರು ಇಲ್ಲದ ಕಾರಣ ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುತ್ತಿರುವ ಪ್ರಿಯಾಂಕ್ ಖರ್ಗೆ, ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

